ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕೆಂದು ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು ಎಂದು ವ್ಯಂಗ್ಯವಾಡಿದ ಅವರು, ದೇಶದ್ರೋಹಿ ಮನಸ್ಥಿತಿ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಬೆಂಗಳೂರು (ಆ.27): ‘ನಮಸ್ತೇ ಸದಾ ವತ್ಸಲೇ ಮಾತೃಭೂಮೇ’ ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು, ಇಟಲಿ ಮಾತೆಗಾ, ಇಟಲಿಯಿಂದ ಬಂದ ಮೇಡಂಗಾ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಪಶ್ನಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜನ್ಮ ಕೊಟ್ಟ ಮಾತೃಭೂಮಿ ಬಗ್ಗೆ ಈ ಭಾವನೆ ಇಟ್ಟುಕೊಳ್ಳುವುದು ತಪ್ಪೇ?, ತಾಯ್ನೆಲಕ್ಕೆ ನಮಸ್ಕಾರ ಮಾಡುವುದೇ ತಪ್ಪೇ? ಒಂದು ಕಡೆ ವಿಧಾನಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದವರನ್ನು ಸಮರ್ಥನೆ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷ, ಮತ್ತೊಂದು ಕಡೆ ತಾಯಿ ಭಾರತಾಂಬೆಗೆ ನಮಸ್ಕರಿಸುವವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಇದನ್ನು ದೇಶದ್ರೋಹಿ ಮನಸ್ಥಿತಿ ಅನ್ನದೇ ಇನ್ನೇನನ್ನಲು ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದು ಸಾಮಾಜಿಕ ಜಾಲತಾಣದ ಮೂಲಕ ಅಭಿಪ್ರಾಯಪಟ್ಟಿದ್ದಾರೆ.