ರಾಜ್ಯದ ಕೆಲ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಕೆಲ ಜಿಲ್ಲೆಯ ತಾಲೂಕುಗಳ, ಹೋಬಳಿಗೆ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ

ಬೆಂಗಳೂರು (ಜು.02) ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಜುಲೈ 5ರ ವರೆಗೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರಿ ಮಳೆ ಹಿನ್ನಲೆಯಲ್ಲಿ ಎಚ್ಚರವಹಿಸುವಂತೆ ಸೂಚನೆ ನೀಡಲಾಗಿದೆ. ಇತ್ತ ಮಲೆನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಹಲವು ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಈ ಪೈಕಿ ಚಿಕ್ಕಮಗಳೂರಿನಲ್ಲಿ ಬಾರಿ ಮಳೆ ಹಿನ್ನಲೆಯಲ್ಲಿ ಐದು ತಾಲೂಕು ಹಾಗೂ ಕೆಲ ಹೋಬಳಗಳ ಶಾಲೆಗಳಿಗೆ ನಾಳೆ (ಜು.03) ರಜೆ ಘೋಷಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿಕ್ಕಮಗಳೂರಿನ ಐದು ತಾಲೂಕುಗಳಿಗೆ ನಾಳೆ ರಜೆ

ಚಿಕ್ಕಮಗಳೂರಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಈ ಪೈಕಿ ತೀವ್ರ ಆತಂಕ ಸೃಷ್ಟಿಸಿರುವ ಎನ್ ಆರ್ ಪುರ,ಕೊಪ್ಪ, ಶೃಂಗೇರಿ, ಕಳಸ ಹಾಗೂ ಮೂಡಿಗೆರೆ ತಾಲೂಕಿನಾದ್ಯಂತ ನಾಳೆ (ಜು.03) ಶಾಲೆಗಳಿಗೆ ರಜೆ ನೀಡಲಲಾಗಿದೆ ಈ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ.

ತಾಲೂಕಿನ ಕೆಲ ಹೋಬಳಿಗಳ ಶಾಲೆಗೂ ರಜೆ

ಚಿಕ್ಕಮಗಳೂರು ತಾಲೂಕಿನ ಕೆಲ ಹೊಬಳಿಗಳ ಶಾಲೆಗಳಿಗೂ ರಜೆ ನೀಡಲಾಗಿದೆ. ಈ ಪೈಕಿ ಭಾರಿ ಮಳೆಯಾಗುತ್ತಿರುವ ಜಾಗರ, ಖಾಂಡ್ಯ, ಅಲ್ದೂರು,ವಸ್ತಾರೆ ಹೋಬಳಿಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಡ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಬಾಗಲಕೋಟೆಯಲ್ಲಿ ಮಳೆಯ ಅಬ್ಬರ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದೆ. ಸದ್ಯ ಚಿಕ್ಕಮಗಳೂರು ಜಿಲ್ಲೆಯ ಕೆಲ ತಾಲೂಕು ಹಾಗೂ ಹೊಬಳಿ ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ. ಇತ್ತ ಬಾಗಲಕೋಟೆಯಲ್ಲಿ ಮಳೆಯ ಅಬ್ಬರಕ್ಕ ಜನ ತತ್ತರಿಸಿದ್ದಾರೆ. ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ಜನರು ಪರದಾಡಿದ್ದಾರೆ. ನವನಗರ,ವಿದ್ಯಾಗಿರಿ, ಬಾಗಲಕೋಟೆ ಸೇರಿ ಜಿಲ್ಲೆಯ ಹಲವೆಡೆ ಮಳೆಯಾಗಿದೆ

ಕೊಡಗು ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್

ಕೆಲ ದಿನ ಕೊಡಗಿನಲ್ಲಿ ಶಾಂತವಾಗಿದ್ದ ಮಳೆರಾಯ ಇದೀಗ ಮತ್ತೆ ಅಬ್ಬರಿಸಲು ಆರಂಭಿಸಿದೆ. ನಿನ್ನೆ ರಾತ್ರಿಯಿಂದ ಕೊಡಗಿನಲ್ಲಿ ನಿರಂತರ ಮಳೆಯಾಗುತ್ತಿದೆ. ಹೀಗಾಗಿ ಕೊಡಗಿನಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ. 115.5 ಮಿಲಿ ಮೀಟರ್ ನಿಂದ 204 ಮಿಲಿ ಮೀಟರ್ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.