ಕಾರಾಗೃಹಗಳಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳನ್ನು ಸಹಿಸುವುದಿಲ್ಲ ಹಾಗೂ ಈ ರೀತಿಯ ಕೃತ್ಯಗಳಲ್ಲಿ ತೊಡಗುವ ತಪ್ಪಿತಸ್ಥರ ಮೇಲೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು (ಜು.13): ಕಾರಾಗೃಹಗಳಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳನ್ನು ಸಹಿಸುವುದಿಲ್ಲ ಹಾಗೂ ಈ ರೀತಿಯ ಕೃತ್ಯಗಳಲ್ಲಿ ತೊಡಗುವ ತಪ್ಪಿತಸ್ಥರ ಮೇಲೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಅಕ್ರಮ ಚಟುವಟಿಕೆಗಳ ಆರೋಪ ಹಿನ್ನೆಲೆಯಲ್ಲಿ ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಮಂಗಳವಾರ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾರಾಗೃಹದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜತೆ ಸಮಾಲೋಚನೆ ನಡೆಸಿದ್ದೇನೆ. ಜೈಲಿನೊಳಗೆ ಕೈದಿಗಳು ಎದುರಿಸುತ್ತಿರುವ ಸಮಸ್ಯೆಗಳು, ರಕ್ಷಣಾ ವ್ಯವಸ್ಥೆ ಹಾಗೂ ವೈದ್ಯಕೀಯ ಸೌಲಭ್ಯಗಳ ಕುರಿತು ಸಜಾ ಬಂದಿಗಳಿಂದ ಕೂಡಾ ಮಾಹಿತಿ ಪಡೆದಿದ್ದೇನೆ’ ಎಂದು ತಿಳಿಸಿದರು.

ಹರ್ಷ ಹತ್ಯೆ ಹಂತಕರ ಮೋಜು-ಮಸ್ತಿ: ಪರಪ್ಪನ ಅಗ್ರಹಾರ ಜೈಲಿಗೆ ಆರಗ ಜ್ಞಾನೇಂದ್ರ ದಿಢೀರ್ ಭೇಟಿ

ಜೈಲಲ್ಲಿ ಜಾಮರ್‌: ‘ಕೇಂದ್ರ ಕಾರಾಗೃಹಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಮೊಬೈಲ್ ಜಾಮರ್‌ಗಳನ್ನು ಅಳವಡಿಸಲು ನಿರ್ಧರಿಸಲಾಗಿದ್ದು, 5ಜಿ ಸಾಮರ್ಥ್ಯದವರೆಗಿನ ಮೊಬೈಲ್ ಕರೆಗಳನ್ನು ನಿಷ್ಕಿ್ರಯ ಗೊಳಿಸುವಂತೆ ಕ್ರಮ ಕೈಗೊಳ್ಳಲಾಗುತ್ತದೆ. ಜೈಲಿನೊಳಗಡೆ ಕೈದಿಗಳಿಗೆ ಮಾದಕ ವಸ್ತು, ಸಿಗರೇಟ್‌, ಮದ್ಯ ಹಾಗೂ ಮೊಬೈಲ್‌ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗೆ ಅಂಕುಶ ಹಾಕುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಾಗಿ ಸೂಚಿಸಿದ್ದೇನೆ’ ಎಂದು ಹೇಳಿದರು.

ಈ ನಡುವೆ, ಸಚಿವರಿಗೆ ಜೈಲಧಿಕಾರಿಗಳು ವಿವರಣೆ ನೀಡಿ, ‘ಇತ್ತೀಚೆಗೆ ಜೈಲಿನೊಳಗೆ ಫುಟ್‌ಬಾಲ…ನಲ್ಲಿ ಮಾದಕ ವಸ್ತುಗಳನ್ನು ತುಂಬಿಸಿ ಜೈಲಿನೊಳಕ್ಕೆ ಎಸೆದ ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅಲ್ಲದೆ, ಜೈಲಿಗೆ ಕರೆತರಲಾದ ವ್ಯಕ್ತಿಯೊಬ್ಬ ಕಾಲಿಗೆ ಬ್ಯಾಂಡೇಜ್ ಜೊತೆ ಕಟ್ಟಿಕೊಂಡಿದ್ದ ಮೊಬೈಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ಈ ಸಂಬಂಧ ಇಬ್ಬರು ಪೊಲೀಸ್‌ ಸಿಬ್ಬಂದಿಯನ್ನೂ ಸಹ ಬಂಧಿಸಲಾಗಿದೆ’ ಎಂದು ತಿಳಿಸಿದರು.

‘ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ದಲ್ಲಿ ಕೈದಿಗಳ ಭೇಟಿಗೆ ಬರುವ ಕುಟುಂಬ ಸದಸ್ಯರ ಹಾಗೂ ಇತರ ರಿಂದ, ಅಕ್ರಮವಾಗಿ ಹಣ ವಸೂಲಿ ಆಗುತ್ತಿದೆ ಎಂಬ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ರಾಜ್ಯ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್‌ ಮೋಹನ್‌ ಹಾಗೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕ ರಮೇಶ್‌ ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರವಾಸಿಗರೇ ಗಮನಿಸಿ: ಆಗುಂಬೆ ಘಾಟ್​ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ, ಬದಲಿ ಮಾರ್ಗ ಇಲ್ಲಿದೆ

ಮುರುಗನ್‌ ವರದಿ ಅನುಷ್ಠಾನ: ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ಅಕ್ರಮ ಚಟುವಟಿಕೆಗಳ ಬಗ್ಗೆ ಎಡಿಜಿಪಿ ಎಸ್‌.ಮುರುಗನ್‌ ನೇತೃತ್ವದ ವಿಚಾರಣಾ ಸಮಿತಿ ಸಲ್ಲಿಸಿರುವ ವರದಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ‘ಈ ವರದಿ ಆಧರಿಸಿ ಡಿಐಜಿ, ಮುಖ್ಯ ಅಧೀಕ್ಷಕ ಹಾಗೂ ಅಧೀಕ್ಷಕಿ ಸೇರಿದಂತೆ 35 ಅಧಿಕಾರಿಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೇರೆಡೆಗೆ ವರ್ಗಾಯಿಸಲಾಗಿದೆ. ಕೆಲವು ಅಧಿಕಾರಿಗಳನ್ನು ಅಮಾನತು ಸಹ ಮಾಡಲಾಗಿದೆ’ ಎಂದರು.