ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸಿದ ಹಿನ್ನೆಲೆಯಲ್ಲಿ ಜುಲೈ 14 ರಂದು ರಾಜ್ಯಾದ್ಯಂತ ಸಂಭ್ರಮಾಚರಣೆ. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಬಸ್‌ಗಳಿಗೆ ಪೂಜೆ ಸಲ್ಲಿಸಿ, ಸಿಹಿ ಹಂಚುವ ಮೂಲಕ ಆಚರಣೆ.

ಬೆಂಗಳೂರು (ಜುಲೈ.11): ಶಕ್ತಿ ಯೋಜನೆ ಅಡಿ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುತ್ತಿರುವ ಮಹಿಳೆಯರ ಸಂಖ್ಯೆ 500 ಕೋಟಿ ತಲುಪುತ್ತಿರುವ ಹಿನ್ನೆಲೆಯಲ್ಲಿ ಜು.14ರಂದು ರಾಜ್ಯದ ಎಲ್ಲ ಜಿಲ್ಲೆ, ತಾಲೂಕುಗಳಲ್ಲಿ ಒಂದು ಬಸ್‌ಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚಲು ನಿರ್ಧರಿಸಲಾಗಿದೆ.

ಈ ಕುರಿತು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್‌.ಎಂ.ರೇವಣ್ಣ ಅವರು, ಜಿಲ್ಲೆ ಮತ್ತು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಗಳ ಸದಸ್ಯರಿಗೆ ಸೂಚನೆ ನೀಡಿದ್ದಾರೆ.

2023ರ ಜೂ.11ರಂದು ಆರಂಭಿಸಲಾದ ಶಕ್ತಿ ಯೋಜನೆ ಅಡಿ ರಾಜ್ಯದ ಪ್ರಯಾಣಿಸುತ್ತಿರುವ ಮಹಿಳೆಯರ ಸಂಖ್ಯೆ 500 ಕೋಟಿ ತಲುಪುತ್ತಿರುವುದು ಸಂಭ್ರಮದ ಸಂಗತಿಯಾಗಿದ್ದು, ವಿಶ್ವದಲ್ಲಿಯೇ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ನೀಡಿದ ಸರ್ಕಾರ ನಮ್ಮದಾಗಿದೆ. ಈ ಸಾಧನೆಯನ್ನು ರಾಜ್ಯಾದ್ಯಂತ ಸರಳವಾಗಿ ಮತ್ತು ಸಂಭ್ರಮದಿಂದ ಆಚರಿಸಬೇಕು. ಅದಕ್ಕಾಗಿ ರಾಜ್ಯದ ಎಲ್ಲ ಜಿಲ್ಲೆ ಮತ್ತು ತಾಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿಗಳ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ಯಾವುದಾದರೂ ಒಂದು ಬಸ್‌ಗೆ ವಿಶೇಷ ಪೂಜೆ ಸಲ್ಲಿಸಬೇಕು.

ಬಸ್‌ ನಿಲ್ದಾಣ, ಬಸ್‌ ಘಟಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸಿಹಿ ಹಂಚಿ ಸಂಭ್ರಮಾಚರಿಸಬೇಕು. ಈ ಕಾರ್ಯವನ್ನು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನಾಲ್ಕು ಉಪಾಧ್ಯಕ್ಷರು ತಮ್ಮ ವಿಭಾಗದ ಮೇಲ್ವಿಚಾರಣೆ ವಹಿಸಬೇಕು ಎಂದು ಸೂಚಿಸಿದ್ದಾರೆ.