ತುಮಕೂರು ಜಿಲ್ಲೆಯ ಹೆಸರು ಬದಲಾವಣೆ ವಿಚಾರದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಪರಂಪರೆ ಮತ್ತು ಅಸ್ತಿತ್ವವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ತುಮಕೂರು ಹೆಸರನ್ನು ಉಳಿಸಿಕೊಳ್ಳುವುದು ಮುಖ್ಯ ಎಂದು ಅವರು ಹೇಳಿದ್ದಾರೆ.

ತುಮಕೂರು (ಜೂ.16): ಜಿಲ್ಲೆಗೆ ತನ್ನದೇ ಅಸ್ತಿತ್ವ ಹಾಗೂ ಪರಂಪರೆ ಇದ್ದು ತುಮಕೂರು ಹೆಸರನ್ನು ಹಾಗೆ ಉಳಿಸಿಕೊಳ್ಳುವುದು ಮುಖ್ಯ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ಧಿ ದೃಷ್ಟಿಯಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಮನಗರವನ್ನು ಬೆಂಗಳೂರು ದಕ್ಷಿಣ ಮಾಡಿದ್ದಾರೆ. ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡುವ ವಿಷಯದ ಬಗ್ಗೆ ಯಾವ ದೃಷ್ಟಿಯಲ್ಲಿ ಗೃಹ ಸಚಿವ ಡಾ। ಜಿ.ಪರಮೇಶ್ವರ್ ಹೇಳಿದ್ದಾರೋ ಗೊತ್ತಿಲ್ಲ. ಆದರೆ ತುಮಕೂರು ಹೆಸರು ಉಳಿಸಿಕೊಳ್ಳುವುದು ಮುಖ್ಯ ಎಂದರು. 

ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡುವ ಪ್ರಸ್ತಾಪ ಹೇಳಿಕೆ ರೂಪದಲ್ಲಿದೆ. ಮುಂದಿನ ದಿನಗಳಲ್ಲಿ ಏನಾಗುತ್ತದೆಯೋ ಕಾದು ನೋಡಬೇಕು. ಬದಲಾವಣೆ ಆದರೆ ಏನು ಉಪಯೋಗ ಆಗದಿದ್ದರೆ ಏನು ಅಂತ ಅದರ ಸಾಧಕ ಬಾಧಕಗಳ ಬಗ್ಗೆ ಚಿಂತನೆ ಮಾಡಿದರೆ, ಆನಂತರ ಹೇಳಬಹುದು ಎಂದು ಹೇಳಿದರು.