ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಂಗಳವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ.

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳ ಮಳೆ, ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಮಂಗಳವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು 11.40ರ ವೇಳೆಗೆ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ. ಬಳಿಕ ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ವಿಜಯಪುರ, ಯಾದಗಿರಿ, ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಳೆ ಹಾನಿ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಧ್ಯಾಹ್ನ 2 ವೇಳೆಗೆ ಸಮೀಕ್ಷೆ ಪೂರ್ಣಗೊಳಿಸಿ ಕಲಬುರಗಿ ನಗರದ ಐವಾನ್‌-ಇ-ಷಾಹಿ ವಸತಿ ಗೃಹಕ್ಕೆ ಆಗಮಿಸಲಿದ್ದಾರೆ.

ಭೋಜನ ವಿರಾಮ ಬಳಿಕ ಮುಖ್ಯಮಂತ್ರಿ ಅವರು ಜಿಲ್ಲೆಯ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಲ್ಕೂ ಜಿಲ್ಲೆಗಳಲ್ಲಿ ಮಳೆಹಾನಿ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಂತರ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಳೆ ಹಾನಿ ಪರಿಹಾರ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.

ತಗ್ಗಿದ ಪ್ರವಾಹ, ತಗ್ಗದ ಬವಣೆ : ಕಲ್ಯಾಣ ಕರ್ನಾಟಕ ಜನರ ಹಾಹಾಕಾರ

ಬೆಂಗಳೂರು : ಕಳೆದೆರಡು ದಿನಗಳಿಗೆ ಹೋಲಿಸಿದರೆ ನೆರೆಯ ಮಹಾರಾಷ್ಟ್ರ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಮತ್ತು ನೆರೆ ಕಡಿಮೆಯಾಗಿದೆ. ಆದರೆ, ಜನರ ಬವಣೆ ಕಡಿಮೆಯಾಗಿಲ್ಲ.

ಕಲ್ಯಾಣ ಕರ್ನಾಟಕದ ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್‌ ಹಾಗೂ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಹಪೀಡಿತ ಜನರ ಸಂಕಷ್ಟ ಹಾಗೆಯೇ ಮುಂದುವರಿದೆ.

ಭೀಮಾ ಒಳಹರಿವು 5.10 ಲಕ್ಷ ಕ್ಯುಸೆಕ್‌ ನಿಂದ 4.75 ಲಕ್ಷ ಕ್ಯುಸೆಕ್‌ಗೆ ಇಳಿದಿದ್ದರೂ, ಯಾದಗಿರಿ ನಗರದ ಭೀಮಾ ನದಿಗಂಟಿಕೊಂಡ ಬಡಾವಣೆಗಳು ಸೇರಿದಂತೆ ನದಿ ಪಾತ್ರದ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಸುರಕ್ಷಿತ ಸ್ಥಳಗಳಿಗೆ ಜನರನ್ನು ಕಳುಹಿಸುವ ಕೆಲಸ ಈಗಲೂ ಮುಂದುವರಿದಿದೆ. ಅನೇಕ ಮನೆಗಳು ಭಾಗಶಃ ನೀರಲ್ಲಿ ಮುಳುಗಿದ್ದರಿಂದ ಹಾಗೂ ನೀರಿನ ಮಟ್ಟ ಹೆಚ್ಚುತ್ತಿರುವ ಕಾರಣ ಕೆಲವರು ಮನೆಯ ಮಾಳಿಗೆಗಳ ಮೇಲೆ ಅಂಗೈಯಲ್ಲಿ ಜೀವ ಹಿಡಿದು ರಾತ್ರಿಗಳನ್ನು ಕಳೆಯುತ್ತಿದ್ದಾರೆ.

ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಜನರ ಹಾಹಾಕಾರ ಎದ್ದಿದೆ. ಜಿಲ್ಲಾಡಳಿತ, ಪೊಲೀಸ್‌ ಹಾಗೂ ರಕ್ಷಣಾ ಸಿಬ್ಬಂದಿಗಳು ತಮ್ಮ ಜೀವ ಪಣಕ್ಕಿಟ್ಟು ಪರಿಹಾರ ಹಾಗೂ ನೆರವಿನ ಕಾರ್ಯಾಚರಣೆಗಳಲ್ಲಿ ತೊಡಗಿದ್ದಾರೆ. ಈ ಮಧ್ಯೆ, ಯಾದಗಿರಿ ಹೊರವಲಯದಲ್ಲಿ ಸೋಮವಾರ ಭೀಮಾ ನದಿಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬನನ್ನು ಈಜಾಡಿ ರಕ್ಷಣೆ ಮಾಡಲಾಗಿದೆ.