ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದು ಸಂಘಟನೆಗಳು ಮತ್ತು ಬಿಜೆಪಿ ಕಾರ್ಯಕರ್ತರನ್ನು ಬೆದರಿಸುತ್ತಿದೆ ಎಂದು ಸಂಸದ ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. 

ಮಂಗಳೂರು (ಜೂ.5): ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರರ ಹಿಂದು ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಕಾರ್ಯ ಮಾಡುತ್ತಿದೆ. ಆ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ದೊರೆಯಬಹುದು ಎಂಬ ಭ್ರಮೆಯಲ್ಲಿ ಕಾಂಗ್ರೆಸ್‌ ಇದೆ. 10 ಮಂದಿ ಸಿದ್ದರಾಮಯ್ಯ ಅವರು ಬಂದರೂ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ಗೆ ಬೆಂಬಲ ದೊರೆಯದು ಎಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಹೇಳಿದರು.

Add Asianetnews Kannada as a Preferred SourcegooglePreferred

ಆಪರೇಶನ್‌ ಸಿಂದೂರ ಹಿನ್ನೆಲೆಯಲ್ಲಿ ವಿದೇಶಗಳಿಗೆ ತೆರಳಿದ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸಿ ಮಂಗಳೂರಿಗೆ ಆಗಮಿಸಿದ ಬಳಿಕ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.ರಾತ್ರಿ ವೇಳೆ ಹಿಂದು ಸಂಘಟನೆಗಳ ಕಾರ್ಯಕರ್ತರ ಮನೆಗೆ ಪೊಲೀಸರು ತೆರಳಿ ಜಿಪಿಎಸ್‌ ಫೋಟೊ ತೆಗೆದು ಕಿರುಕುಳ ನೀಡಲಾಗುತ್ತಿದೆ.

ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಕಾನೂನು ಸುವ್ಯವಸ್ಥೆ ಪಾಲನೆ ಮಾಡಲು ಆಗದ ಕಾಂಗ್ರೆಸ್‌ ಸರ್ಕಾರ ಇದೀಗ ಹಿಂದು ಕಾರ್ಯಕರ್ತರನ್ನು ಬೆದರಿಸಿ ಪಕ್ಷ ಕಟ್ಟಲು ಹೊರಟಿದೆ. ದಕ್ಷಿಣ ಕನ್ನಡ ಹಿಂದುತ್ವದ ನೆಲ. ಇಲ್ಲಿನ ಜನತೆ ರಾಷ್ಟ್ರೀಯತೆಯ ಪರವಾಗಿದ್ದಾರೆ. ಪೊಲೀಸರ ಮೂಲಕ ಹಿಂದು ಕಾರ್ಯಕರ್ತರನ್ನು ಬೆದರಿಸಿದರೆ ಜನತೆ ನಿಮ್ಮ ವಿರುದ್ಧ ರೊಚ್ಚಿಗೇಳುವ ದಿನ ದೂರವಿಲ್ಲ ಎಂದು ಎಚ್ಚರಿಸಿದರು.

ಹಿಂದುತ್ವದ ಕಾರ್ಯಕರ್ತರಿಗೆ ಹೋರಾಟ ಹೊಸದಲ್ಲ. ಹಿಂದು ಕಾರ್ಯಕರ್ತರ ಪರವಾಗಿ ನಾವೆಲ್ಲರೂ ಇದ್ದೇವೆ. ಪೊಲೀಸರ ಮೂಲಕ ಕಾಂಗ್ರೆಸ್‌ ಸರ್ಕಾರ ನೀಡುತ್ತಿರುವ ಹಿಂಸೆ, ಕಿರುಕುಳವನ್ನು ಎದುರಿಸಲು ಕಾನೂನು ಹೋರಾಟ ನಡೆಸುವ ಜತೆಗೆ ಜನಜಾಗೃತಿ ಮೂಡಿಸುತ್ತೇವೆ ಎಂದು ಅವರು ಹೇಳಿದರು.

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಸಂಸದ ಕ್ಯಾ. ಬ್ರಿಜೇಶ್‌ ಚೌಟ, ಶಾಸಕರಾದ ಉಮಾನಾಥ ಕೋಟ್ಯಾನ್‌, ರಾಜೇಶ್‌ ನಾಯ್ಕ್‌, ವೇದವ್ಯಾಸ ಕಾಮತ್‌, ಡಾ. ಭರತ್‌ ಶೆಟ್ಟಿ, ಹರೀಶ್‌ ಪೂಂಜಾ, ಪ್ರತಾಪಸಿಂಹ ನಾಯಕ್‌, ಕಿಶೋರ್‌ ಕುಮಾರ್‌ ಪುತ್ತೂರು, ಮಾಜಿ ಸಚಿವ ನಾಗರಾಜ ಶೆಟ್ಟಿ, ವಿಧಾನ ಪರಿಷತ್‌ ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ, ಕ್ಯಾ. ಗಣೇಶ್‌ ಕಾರ್ಣಿಕ್‌, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್‌ ಆರ್ವಾರ್‌, ಪ್ರೇಮಾನಂದ ಶೆಟ್ಟಿ ಮತ್ತಿತರರಿದ್ದರು.