ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್‌) ಪ್ರಕ್ರಿಯೆಯಲ್ಲಿನ ಗೊಂದಲಗಳ ಬಗ್ಗೆ ಆರೋಪಗಳು ಹಾಗೂ ದೂರು ಸಲ್ಲಿಕೆ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ಸೋಮವಾರ ಕರ್ನಾಟಕಕ್ಕೆ ಭೇಟಿ ನೀಡುತ್ತಿದೆ.

ಬೆಂಗಳೂರು (ಜು.5): ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್‌) ಪ್ರಕ್ರಿಯೆಯಲ್ಲಿನ ಗೊಂದಲಗಳ ಬಗ್ಗೆ ಆರೋಪಗಳು ಹಾಗೂ ದೂರು ಸಲ್ಲಿಕೆ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ಸೋಮವಾರ ಕರ್ನಾಟಕಕ್ಕೆ ಭೇಟಿ ನೀಡುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ತಂಡವು ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿಯಿಂದ ಮಾಹಿತಿ ಸಂಗ್ರಹಿಸಲಿದೆ. ಅಂತೆಯೇ ಈ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಕೇಳಿ ಬಂದಿರುವ ಆರೋಪಗಳು, ಲೋಪಗಳು ಹಾಗೂ ಗೊಂದಲಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಿದೆ. ಅಂತೆಯೇ ರಾಜಕೀಯ ಪಕ್ಷಗಳಿಂದ ಸಲ್ಲಿಕೆಯಾಗಿರುವ ದೂರುಗಳ ಬಗ್ಗೆಯೂ ಕೇಂದ್ರ ಅಧಿಕಾರಿಗಳ ತಂಡ ಸಮಾಲೋಚನೆ ನಡೆಸಲಿದೆ ಎಂದು ತಿಳಿದು ಬಂದಿದೆ.

SIR: ಕೇಂದ್ರ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ

ಎಸ್‌ಐಆರ್‌ ಪ್ರಕ್ರಿಯೆಯ ವಿಶ್ವಾಸಾರ್ಹತೆ ಹಾಗೂ ನಿಖರತೆ ಬಗ್ಗೆಯೇ ಪ್ರಶ್ನೆಗಳು ಎದ್ದಿರುವುದರಿಂದ ಕೇಂದ್ರ ತಂಡ ಗಂಭೀರವಾಗಿ ಪರಿಗಣಿಸಿದೆ. ರಾಜ್ಯದ ಎಸ್‌ಐಆರ್‌ ಪ್ರಕ್ರಿಯೆಯ ವಾಸ್ತವಾಂಶಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ನೀಡಲಿದೆ.

ಬಳಿಕ ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ ಎಸ್‌ಐಆರ್‌ ಪ್ರಕ್ರಿಯೆಯ ಮೇಲ್ವಿಚಾರಣೆಗೆ ಹೊರರಾಜ್ಯದ ಅಥವಾ ಕೇಂದ್ರ ಸರ್ಕಾರದ ಅಧಿಕಾರಿಗಳನ್ನು ನೇಮಿಸುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ರಾಜಕೀಯ ಪಕ್ಷಗಳ ಅಭಿಪ್ರಾಯ ಸಂಗ್ರಹಿಸುವ ಸಾಧ್ಯತೆ ಇದೆ. ಕರ್ನಾಟಕ ಪ್ರತಿನಿಧಿಸುವ ಕೇಂದ್ರ ಸಚಿವರು ಈ ಎಸ್‌ಐಆರ್‌ ಪ್ರಕ್ರಿಯೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇವೆಲ್ಲವುಗಳ ಬಗ್ಗೆ ಮಾಹಿತಿ ಪಡೆದು ಅಂತಿಮವಾಗಿ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿದು ಬಂದಿದೆ.