ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಚೇತರಿಕೆ: 3 ದಿನದಲ್ಲಿ ಡಿಸ್ಚಾರ್ಜ್
ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿ ಕೃಷ್ಣ ಅವರ ಆರೋಗ್ಯ ವಿಚಾರಿಸಿದ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ
ಬೆಂಗಳೂರು(ಸೆ. 27): ಮೂರು ದಿನಗಳ ಹಿಂದೆ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಆಗಿದ್ದು, ಸಂಪೂರ್ಣ ಆರೋಗ್ಯವಾಗಿದ್ದಾರೆ. ಇನ್ನು ಎರಡು ಅಥವಾ ಮೂರು ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಲಿದ್ದಾರೆ. ವೈದ್ಯರು ಸಂಪೂರ್ಣ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ.
ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು
ಗೂಳಿಗೌಡ ಭೇಟಿ:
ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿದ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಕೃಷ್ಣ ಅವರ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಕಳೆದ ಮೂರು ದಿನಗಳಿಂದ ತಮ್ಮ ಆರೋಗ್ಯದ ಬಗ್ಗೆ ಆತಂಕಗೊಂಡು ಶೀಘ್ರ ಚೇತರಿಕೆಗೆ ಹಾರೈಸಿದ ಹಿತೈಷಿಗಳು, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಎಸ್.ಎಂ. ಕೃಷ್ಣ ಕೃತಜ್ಞತೆ ಸಲ್ಲಿಸಿದ್ದಾರೆ.