ಕೇರಳ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಕೋವಿಡ್‌ ನಿರ್ಬಂಧಗಳನ್ನು ಸಡಿಲಗೊಳಿಸುವ ನಿಟ್ಟಿನಲ್ಲಿ ತಜ್ಞರ ಸಮಿತಿ ಸಭೆ  ಜನರಿಗೆ ಅನುಕೂಲವಾಗುವಂತೆ ನಿರ್ಧಾರ ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಂಗಳೂರು (ಅ.14):  ಕೇರಳ (Kerala) ಮತ್ತು ಮಹಾರಾಷ್ಟ್ರ (Maharashtra) ಗಡಿಯಲ್ಲಿ ಕೋವಿಡ್‌ (Covid) ನಿರ್ಬಂಧಗಳನ್ನು ಸಡಿಲಗೊಳಿಸುವ ನಿಟ್ಟಿನಲ್ಲಿ ದಸರಾ ಮುಗಿದ ಕೂಡಲೆ ಕೋವಿಡ್‌ ತಜ್ಞರ ಸಮಿತಿ ಸಭೆ ನಡೆಸಿ ಜನರಿಗೆ ಅನುಕೂಲವಾಗುವಂತೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕರಾವಳಿಗೆ (Coastal) ಜಿಲ್ಲೆಗಳಿಗೆ ಬುಧವಾರ ಆಗಮಿಸಿದ ಅವರು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (International Airport)ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕಕ್ಕೆ (Karnataka) ಹೊಂದಿಕೊಂಡಿರುವ ಕೇರಳ (Kerala) ಮತ್ತು ಮಹಾರಾಷ್ಟ್ರದಲ್ಲಿ (Maharashtra) ಕೋವಿಡ್‌ (Covid) ಪರಿಸ್ಥಿತಿ ಬಗ್ಗೆ ತಜ್ಞರು ಮೌಲ್ಯಮಾಪನ ಮಾಡುತ್ತಿದ್ದಾರೆ. ದಸರಾ (Dasara) ಹಬ್ಬದ ಬಳಿಕ ಕೋವಿಡ್‌ ತಜ್ಞರ ಸಭೆ ಕರೆಯಲಾಗುವುದು. ಗಡಿ ಜಿಲ್ಲೆಗಳಲ್ಲಿ ಈಗಿರುವ ನಿರ್ಬಂಧಗಳನ್ನು ಸಡಿಲ ಮಾಡುವ ಕುರಿತು ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಪ್ರಾಥಮಿಕ ಶಾಲೆಗಳನ್ನು (School) ಪ್ರಾರಂಭಿಸುವ ಬಗ್ಗೆಯೂ ಇದೇ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ದಾಖಲೆಯ 6 ಕೋಟಿ ಡೋಸ್‌ ಲಸಿಕೆ ನೀಡಿಕೆ

2 ವರ್ಷದಿಂದ 18 ವರ್ಷದೊಳಗಿನ ವಯೋಮಾನದ ಮಕ್ಕಳಿಗೆ ಕೋವಿಡ್‌ ಲಸಿಕೆ (Covid Vaccine) ಹಾಕುವ ಕುರಿತು ಪ್ರಯೋಗ ಕೊನೆ ಹಂತದಲ್ಲಿದೆ. ಅದಕ್ಕೆ ಎಲ್ಲ ರೀತಿಯ ಒಪ್ಪಿಗೆ ದೊರೆತ ತಕ್ಷಣ ಲಸಿಕೆ ಹಾಕಲು ತ್ವರಿತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಕೋವಿಡ್‌ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ಪ್ರಕರಣಗಳನ್ನು ದಾಖಲಿಸಿ, ಚಾರ್ಜ್ ಶೀಟ್‌ ಹಾಕಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬೊಮ್ಮಾಯಿ (Basavaraja Bommai), ಸ್ಥಳೀಯ ಪೊಲೀಸ್‌ (Police) ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ರಾಜ್ಯಕ್ಕೆ ಮೂರು ರೇಕ್‌ ಕಲ್ಲಿದ್ದಲು (Coal) ಬಂದರೆ ಕಂಫರ್ಟೇಬಲ್‌ ಆಗಲಿದೆ. ಅದನ್ನು ತರಿಸಲು ವ್ಯವಸ್ಥೆ ಮಾಡಿದ್ದೇವೆ. ಈಗಾಗಲೇ ಕಲ್ಲಿದ್ದಲು ಸಚಿವರೊಂದಿಗೆ ಮಾತುಕತೆ ನಡೆಸಿದ್ದೇನೆ, ಅಧಿಕಾರಿಗಳ ಮಟ್ಟದಲ್ಲೂ ಸೂಕ್ತ ವ್ಯವಸ್ಥೆಗಳಾಗಿವೆ ಎಂದರು.

1ರಿಂದ 5ನೇ ತರಗತಿ ಆರಂಭ ಯಾವಾಗ? ಈ ಬಗ್ಗೆ ಸ್ಪಷ್ಟನೆ ಕೊಟ್ಟ ಸಿಎಂ ಬೊಮ್ಮಾಯಿ

ಅನೈತಿಕ ಪೊಲೀಸ್‌ಗಿರಿ (Moral Policing) ಆರೋಪಿಗಳ ಪರ ನಿಂತ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್‌ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಿಎಂ, ಇದು ಸೂಕ್ಷ್ಮ ವಿಚಾರ. ಸಮಾಜದಲ್ಲಿ ನಾವೆಲ್ಲರೂ ಜವಾಬ್ದಾರಿ ಹೊಂದಬೇಕಾಗುತ್ತದೆ. ಸಮಾಜದಲ್ಲಿ ಜನರ ಭಾವನೆಗಳಿಗೆ ಧಕ್ಕೆ ಬರದಂತೆ ನಡೆದುಕೊಳ್ಳಬೇಕಾಗುತ್ತದೆ. ಪರಸ್ಪರರ ಭಾವನೆಗಳಿಗೆ ಧಕ್ಕೆ ಉಂಟಾದಾಗ ಸಹಜವಾಗಿ ಕ್ರಿಯೆ- ಪ್ರತಿಕ್ರಿಯೆಗಳು ಇದ್ದೇ ಇರುತ್ತವೆ. ಸಾಮಾಜಿಕವಾಗಿ ಸಾಮರಸ್ಯವನ್ನು ಕಾಪಾಡುವುದು ಸರ್ಕಾರದ ಕರ್ತವ್ಯ. ಸಮಾಜದಲ್ಲಿ ನೈತಿಕತೆ ಇಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ಯುವಕರು ಕೂಡ ಸಾಮಾಜಿಕವಾಗಿ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಪರೋಕ್ಷವಾಗಿ ಉತ್ತರಿಸಿದರು.

ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಇಲಾಖೆ ಸಚಿವ ಸುನಿಲ್‌ ಕುಮಾರ್‌ (Sunilf Kumar), ಶಾಸಕರಾದ ಡಾ. ಭರತ್‌ ಶೆಟ್ಟಿ, ಉಮಾನಾಥ್‌ ಕೋಟ್ಯಾನ್‌, ಮೇಯರ್‌ ಪ್ರೇಮಾನಂದ ಶೆಟ್ಟಿ, ಕರಾವಳಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ನಗರ ಪೊಲೀಸ್‌ ಆಯುಕ್ತ ಶಶಿಕುಮಾರ್‌ ಮತ್ತಿತರರು ಇದ್ದರು.

ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ವಿರುದ್ಧ ಕಾಂಗ್ರೆಸ್‌ ಮುಖಂಡ ಉಗ್ರಪ್ಪ ಆರೋಪ ಮಾಡಿರುವುದು ಅವರ ವೈಯಕ್ತಿಕ ಹೇಳಿಕೆ. ಈ ಬಗ್ಗೆ ನನ್ನ ಬಳಿ ಹೆಚ್ಚಿನ ಮಾಹಿತಿ ಇಲ್ಲ. ಆದ್ದರಿಂದ ಇದಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.