10 ಎಚ್‌ಪಿವರೆಗಿನ ಘಟಕಗಳಿಗೆ 250 ಯುನಿಟ್‌ವರೆಗೆ ಉಚಿತ ವಿದ್ಯುತ್‌ ಒದಗಿಸಲು ಆಯವ್ಯಯದಲ್ಲಿ ಘೋಷಿಸಲಾಗಿದ್ದು, ಶೀಘ್ರವೇ ಆದೇಶ ಹೊರಡಿಸಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು(ಜು.25): ನೇಕಾರರ ವಿಶೇಷ ಯೋಜನೆಯಡಿ 20 ಎಚ್‌ಪಿವರೆಗಿನ ಸಾಮರ್ಥ್ಯದ ವಿದ್ಯುತ್‌ ಮಗ್ಗದ ಘಟಕಗಳಿಗೆ ಪ್ರತಿ ಯುನಿಟ್‌ಗೆ 1.25 ರು. ರಿಯಾಯಿತಿ ದರದಲ್ಲಿ ವಿದ್ಯುತ್‌ ಪೂರೈಕೆ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ತಮ್ಮನ್ನು ಭೇಟಿ ಮಾಡಿದ ರಾಜ್ಯ ನೇಕಾರರ ಸಮುದಾಯಗಳ ಒಕ್ಕೂಟದ ನಿಯೋಗ ಸಲ್ಲಿಸಿದ ಬೇಡಿಕೆಗಳಿಗೆ ಸ್ಪಂದಿಸಿ ಈ ಭರವಸೆ ನೀಡಿದ ಅವರು 10 ಎಚ್‌ಪಿವರೆಗಿನ ಘಟಕಗಳಿಗೆ 250 ಯುನಿಟ್‌ವರೆಗೆ ಉಚಿತ ವಿದ್ಯುತ್‌ ಒದಗಿಸಲು ಆಯವ್ಯಯದಲ್ಲಿ ಘೋಷಿಸಲಾಗಿದ್ದು, ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.

ನೇಕಾರರಿಗೆ 20 ಹೆಚ್‌ಪಿವರೆಗೆ ಉಚಿತ ವಿದ್ಯುತ್‌ಗೆ ಒತ್ತಾಯ

ಹಿಂದುಳಿದ ವರ್ಗಗಳ 2 ಎ ವರ್ಗದಡಿ ಬರುವ ಸಮುದಾಯಗಳ ಗುತ್ತಿಗೆದಾರರಿಗೆ 1 ಕೋಟಿ ರು. ವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ಘೋಷಿಸಲಾಗಿದ್ದು, ನೇಕಾರರೂ ಸದುಪಯೋಗಿಸಿಕೊಳ್ಳಬೇಕು ಎಂದು ತಿಳಿಸಿದರು.
ನೇಕಾರ ಸಮುದಾಯದ ಮುಖಂಡರು, ಸ್ವಾಮೀಜಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯವನ್ನೂ ನೀಡಬೇಕು. ಒಕ್ಕೂಟಕ್ಕೆ ಬೆಂಗಳೂರು ಮಹಾನಗರದಲ್ಲಿ ನಿವೇಶನ ನೀಡಬೇಕು. ಕಾಂತರಾಜ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್‌.ಎಂ. ರೇವಣ್ಣ, ಹಂಪಿ ಗಾಯತ್ರಿ ಪೀಠದ ದಯಾನಂದಪುರಿ ಸ್ವಾಮೀಜಿ, ತಪಸಿಹಳ್ಳಿ ದಿವ್ಯಜ್ಞಾನಾನಂದ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆ ನೀರಲಕೇರಿ ಸಿದ್ಧಾರೂಢ ಮಠದ ಘನಲಿಂಗ ಸ್ವಾಮೀಜಿ, ಧಾರವಾಡದ ಶಿವಾನಂದ ಮಠದ ಶಿವಾನಂದ ಸ್ವಾಮೀಜಿ, ರಾಜ್ಯ ನೇಕಾರರ ಸಮುದಾಯಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಬಿ.ಎಸ್‌. ಸೋಮಶೇಖರ ಮತ್ತಿತರ ನೇಕಾರ ಮುಖಂಡರು ಉಪಸ್ಥಿತರಿದ್ದರು.