ಕೆಲವು ಧರ್ಮದ್ವೇಷಿಗಳು ಆಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆಗೆ ಶೃಂಗೇರಿ ಮಠದ ವಿರೋಧವಿದೆ ಎಂದು ಸಂದೇಶ ಬಿತ್ತರಿಸುತ್ತಿದ್ದಾರೆ. ಆದರೆ, ಇದು ಸುಳ್ಳು ಸಂದೇಶವೆಂದು ಶೃಂಗೇರಿ ಮಠದ ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಸ್ಪಷ್ಟೀಕರಣ ನೀಡಿದ್ದಾರೆ.

ಚಿಕ್ಕಮಗಳೂರು (ಜ.08): ದೇಶದಲ್ಲಿ ಸುಮಾರು 500 ವರ್ಷಗಳ ಸುಧೀರ್ಗ ಹೋರಾಟದ ಬಳಿಕ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಲಾಗಿದ್ದು, ಜ.22ಕ್ಕೆ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾನ ಮಾಡಲಾಗುತ್ತಿದೆ. ಆದರೆ, ಕೆಲವು ಧರ್ಮ ದ್ವೇಷಿಗಳು ಶೃಂಗೇರಿ ಮಠದಿಂದ ಶ್ರೀರಾಮ ಪ್ರಾಣ ಪ್ರತಿಷ್ಠೆಗೆ ವಿರೋಧವಿದೆ ಎಂದು ಸುಳ್ಳು ಸುದ್ದಿಯನ್ನು ಬಿತ್ತರಿಸಿದ್ದಾರೆ. ಆದರೆ, ಶೃಂಗೇರಿ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ರಾಮಮಂದಿರಕ್ಕೆ ನಮ್ಮ ವಿರೋಧವಿಲ್ಲ ಎಂದು ಸ್ಪಷ್ಟೀಕರಣ ಕೊಟ್ಟಿದ್ದಾರೆ.

Add Asianetnews Kannada as a Preferred SourcegooglePreferred

ಸುಮಾರು 500 ವರ್ಷಗಳ ಸುದೀರ್ಘವಾದ ಹೋರಾಟದ ನಂತರ ಶ್ರೀರಾಮಚಂದ್ರನ ಅವತಾರ ಕ್ಷೇತ್ರವಾದ ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನಿಗೆ ಭವ್ಯವಾದ ದೇವಸ್ಥಾನದ ನಿರ್ಮಾಣವು ನೆರವೇರಿ ಇದೇ ಶೋಭಕೃತ್ ಪುಷ್ಯ ಶುಕ್ಲದ್ವಾದಶಿ (22-1-2024) ಸೋಮವಾರದಂದು ಪ್ರಾಣಪ್ರತಿಷ್ಠಾಮಹೋತ್ಸವವು ಅತ್ಯಂತ ವೈಭವೋಪೇತವಾಗಿ ಸಂಪನ್ನಗೊಳ್ಳಲಿದೆ. ವಿಷಯವು ಸಮಸ್ತ ಆಸ್ತಿಕಸ್ತೋಮಕ್ಕೂ ಸಂತಸವಾಗಿದೆ.

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ 18 ವರ್ಷದ ಯುವತಿ ಬಲಿ: 2024ರಲ್ಲಿ ಮೊದಲ ಸಾವು

ಆದರೆ, ಇಂತಹ ಸಂದರ್ಭದಲ್ಲಿ ಕೆಲವರು ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ www.dainikjagran.com ಎಂಬ ಹೆಸರನ್ನು ಉಪಯೋಗಿಸಿಕೊಂಡು ಶೃಂಗೇರಿ ಶಾರದಾಪೀಠದ ಪ್ರಸ್ತುತ ಅಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಛಾಯಾಚಿತ್ರದ ಜೊತೆಗೆ ಶ್ರೀಗಳು ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ವಿರೋಧಿಸುತ್ತಿದ್ದಾರೆ ಎಂಬ ಅರ್ಥವು ಬರುವ ಹಾಗೆ ಸಂದೇಶವನ್ನು ಹಾಕಿ ಪ್ರಚಾರ ಮಾಡುತ್ತಿದ್ದಾರೆ. ಆದರೆ, ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಇಂತಹ ಯಾವುದೇ ಸಂದೇಶ ನೀಡಿಲ್ಲ.

ಇದು ಕೇವಲ ಧರ್ಮದ್ವೇಷಿಗಳಾದ ಕೆಲವರು ಮಾಡುತ್ತಿರುವ ಮಿಥ್ಯಾಪ್ರಚಾರವೇ ಸರಿ. ಆದ್ದರಿಂದ ಅಸ್ತಿಕ ಮಹಾಜನರು ಯಾವುದೇ ಕಾರಣಕ್ಕೆ ಇಂತಹ ಅಪಪ್ರಚಾರಗಳಿಗೆ ಬೆಲೆಯನ್ನು ಕೊಡಬಾರದು. ಹಾಗೆಯೇ ದಕ್ಷಿಣಾಮ್ನಾಯ ಶೃಂಗೇರಿ ಶಾರದಾಪೀಠದ ಅಧಿಕೃತವಾದ www.sringeri.net ಎಂಬ ವೆಬ್‌ಸೈಟಿನಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾದ ವಿಷಯಗಳನ್ನು ಮಾತ್ರವೇ ಪ್ರಾಮಾಣಿಕವಾಗಿ ಪರಿಗಣಿಸಬೇಕೆಂದು ಈ ಮೂಲಕ ನಿವೇದಿಸುತ್ತಿದ್ದೇವೆ.

ಅಯೋಧ್ಯೆ ರಾಮಮಂದಿರ ಉದ್ಘಾಟನೆ: ತುಮಕೂರು ಜಿಲ್ಲೆಯ ಮೂವರು ಸ್ವಾಮೀಜಿಗಳಿಗೆ ಆಹ್ವಾನ!

'sharadapeetham' ಯೂಟ್ಯೂಬ್ ಚ್ಯಾನೆಲ್ ಮೂಲಕ ಕಳೆದ ದೀಪಾವಳಿಯ (12-11-2023) ಸಂದರ್ಭದಲ್ಲಿ ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ಮನಸ್ಸಿನಲ್ಲಿಟ್ಟುಕೊಂಡು ಶ್ರೀರಾಮತಾರಕ ಮಹಾಮಂತ್ರವನ್ನು ಜಪಿಸುವಂತೆ ಎಲ್ಲಾ ಆಸ್ತಿಕರಿಗೂ ಶೃಂಗೇರಿ ಜಗದ್ಗುರುಗಳು ಸಂದೇಶವನ್ನು ನೀಡಿದ್ದರು. ಅದನ್ನನುಸರಿಸಿ ಆಸ್ತಿಕರು ಅತ್ಯಧಿಕ ಸಂಖ್ಯೆಯಲ್ಲಿ ಮಂತ್ರಜಪವನ್ನು ಮಾಡುತ್ತಿರುವುದು ಈ ಸಂದರ್ಭದಲ್ಲಿ ಗಮನಾರ್ಹವಾಗಿದೆ. ಹಾಗೆಯೇ ಅತ್ಯಂತ ಪವಿತ್ರವೂ ಅಪರೂಪವು ಆದ ಈ ಪ್ರಾಣಪ್ರತಿಷ್ಠಾಮಹೋತ್ಸವದ ಸುಸಂದರ್ಭದಲ್ಲಿ ಎಲ್ಲಾ ಆಸ್ತಿಕರು ಯಥಾಯೋಗ್ಯವಾಗಿ ಭಾಗವಹಿಸಿ ಶ್ರೀರಾಮನ ಪರಿಪೂರ್ಣಕೃಪೆಗೆ ಪಾತ್ರರಾಗಿ ಕೃತಾರ್ಥರಾಗಬೇಕೆಂದು ಸ್ವಾಮೀಜಿ ತಿಳಿಸಿದ್ದಾರೆ.