ತ್ಯಾಜ್ಯ ಆಯುವವರ ಕಲ್ಯಾಣಕ್ಕಾಗಿ ಕಲ್ಯಾಣ ಮಂಡಳಿ ಸ್ಥಾಪನೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಭೇಟಿಗೆ ನಿಯೋಗವನ್ನು ಕರೆದೊಯ್ಯುವುದಾಗಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರು : ತ್ಯಾಜ್ಯ ಆಯುವವರ ಕಲ್ಯಾಣಕ್ಕಾಗಿ ಕಲ್ಯಾಣ ಮಂಡಳಿ ಸ್ಥಾಪನೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಭೇಟಿಗೆ ನಿಯೋಗವನ್ನು ಕರೆದೊಯ್ಯುವುದಾಗಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ತ್ಯಾಜ್ಯ ಆಯುವವರ ದಿನಾಚರಣೆ

ಶನಿವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ತ್ಯಾಜ್ಯ ಶ್ರಮಿಕ ಸಂಘ ಆಯೋಜಿಸಿದ್ದ ಅಂತಾರಾಷ್ಟ್ರೀಯ ತ್ಯಾಜ್ಯ ಆಯುವವರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಕಡು ಬಡವರಾಗಿರುವ ತ್ಯಾಜ್ಯ ಆಯುವವರಿಂದ ನಗರ, ಪ್ರದೇಶಗಳು ಸ್ವಚ್ಛವಾಗಿರುತ್ತವೆ. ಪರಿಸರ ಮಾಲಿನ್ಯ ಆಗುವುದನ್ನು ಈ ಶ್ರಮಿಕರು ತಪ್ಪಿಸುತ್ತಾರೆ. ಅವರಿಗೆ ಸಾಮಾಜಿಕ ಭದ್ರತೆ, ಸರ್ಕಾರದಿಂದ ಸೌಲಭ್ಯಗಳು, ಗೌರವಯುತ ಜೀವನಕ್ಕಾಗಿ ಅಗತ್ಯ ಸೌಕರ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ರಾಜ್ಯದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ತ್ಯಾಜ್ಯ ಕಾರ್ಮಿಕರು

ಆರ್‌ಪಿಐ ರಾಜ್ಯಾಧ್ಯಕ್ಷ ಆರ್. ಮೋಹನ್ ರಾಜು ಮಾತನಾಡಿ, ರಾಜ್ಯದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ತ್ಯಾಜ್ಯ ಕಾರ್ಮಿಕರು ಅನೌಪಚಾರಿಕ ತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದರಲ್ಲಿ ಮಹಿಳೆಯರು, ದಲಿತರು ಮತ್ತು ಇತರ ಹಿಂದುಳಿದ ಸಮುದಾಯದವರಾಗಿದ್ದಾರೆ. ಅವರಿಗೆ ಸಂವಿಧಾನಿಕ ಹಕ್ಕುಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಸ್ಲಂ ಜನರ ಸಂಘಟನೆ ರಾಜ್ಯಾಧ್ಯಕ್ಷ ಎಲ್.ಐಸಾಕ್ ಅಮೃತ ರಾಜ್, ವಿಮೆನ್ಸ್ ವಾಯ್ಸ್ ಉಪಾಧ್ಯಕ್ಷೆ ರುತ್ ಮನೋರಮ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.