ರಾಜ್ಯದ 20 ಜಿಲ್ಲೆಗಳ 324 ಗ್ರಾಮಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈ ಹಿನ್ನೆಲೆ, ಸರ್ಕಾರವು 76 ಟ್ಯಾಂಕರ್ ಮತ್ತು 280 ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ತುರ್ತು ನಿರ್ವಹಣೆಗಾಗಿ 60 ಕೋಟಿ ರೂ. ಬಿಡುಗಡೆ

ಬೆಂಗಳೂರು (ಏ.5): ಬಿರುಬಿಸಿಲ ತಾಪ ಏರುತ್ತಿರುವ ನಡುವೆಯೇ ರಾಜ್ಯದ 20 ಜಿಲ್ಲೆಗಳ 60 ತಾಲೂಕುಗಳ 324 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ಈ ಪೈಕಿ 76 ಗ್ರಾಮಗಳಿಗೆ 76 ಟ್ಯಾಂಕರ್‌ಗಳ ಮೂಲಕ ಹಾಗೂ 248 ಗ್ರಾಮಗಳಿಗೆ 280 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಪಡೆದು ಕುಡಿಯುವ ನೀರೊದಗಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕುಡಿಯುವ ನೀರಿಗೆ ಸಂಬಂಧಿಸಿ ತುರ್ತು ಕಾಮಗಾರಿಗಳನ್ನು ನಿರ್ವಹಿಸಲು ಈಗಾಗಲೇ 60 ಕೋಟಿ ರು. ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗಾಗಿ 14.50 ಕೋಟಿ ರು. ಅನ್ನು ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೇಸಿಗೆ ಅವಧಿಯಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು ನಿರಾತಂಕವಾಗಿರಲು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸೇರಿ ತಾಲೂಕು ಹಾಗೂ ಗ್ರಾಪಂ ಮಟ್ಟದಲ್ಲಿ ಅಧಿಕಾರಿಗಳು ನಿಗಾ ಇರಿಸಿದ್ದು, ಪರಿಶೀಲನಾ ಸಭೆ ನಡೆಸುತ್ತಿದ್ದಾರೆ. ರಾಜ್ಯದ 31 ಜಿಲ್ಲೆಗಳಲ್ಲಿ 26,676 ಗ್ರಾಮಗಳಿದ್ದು, 57,883 ಜನವಸತಿ ಪ್ರದೇಶಗಳಲ್ಲಿ 1,01,30,798 ಮನೆಗಳು ಇವೆ. ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ಸಮಸ್ಯೆ ಎದುರಾದಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆಯಲಾಗುವುದು. ಅಗತ್ಯಬಿದ್ದಲ್ಲಿ ಟ್ಯಾಂಕರ್‌ ಮೂಲಕವೂ ನೀರು ಸರಬರಾಜು ಮಾಡಲಾಗುವುದು. ಕೊಳವೆ ಬಾವಿಗಳನ್ನು ಫ್ಲಶಿಂಗ್‌ ಮತ್ತು ಆಳಗೊಳಿಸುವುದರೊಂದಿಗೆ ನೀರಿನ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಕಂಟ್ರೋಲ್‌ ರೂಂ ಸ್ಥಾಪನೆ:

ಕುಡಿಯುವ ನೀರಿನ ಅಭಾವ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲಾ ಜಿಪಂಗಳಲ್ಲಿ 24/7 ಕಂಟ್ರೋಲ್‌ ರೂಮ್‌ ತೆರೆಯಲಾಗಿದೆ, ತಾಲೂಕು ಮಟ್ಟದಲ್ಲಿ ಕಾರ್ಯಾನಿರ್ವಾಹಕ ಅಧಿಕಾರಿಗಳ ಮೂಲಕ ಕ್ಷಿಪ್ರ ಕಾರ್ಯಪಡೆ ರಚಿಸಿ ಪರಿಸ್ಥಿತಿ ನಿರ್ವಹಿಸಲಾಗುತ್ತಿದೆ ಎಂದು ಸಚಿವ ವಿವರಿಸಿದ್ದಾರೆ.