ಹಿಂದುಳಿದ ಸಮುದಾಯಗಳ ಮಠಾಧೀಶರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು (ಜ.7): ಹಿಂದುಳಿದ ಸಮುದಾಯಗಳ ಮಠಾಧೀಶರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು ಸಂಜೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಉಪ್ಪಾರ ಸಮುದಾಯದ ಭಗೀರಥ ಪೀಠದ ಡಾ. ಪುರುಷೋತ್ತಮನಾಂದಪುರಿ ಸ್ವಾಮೀಜಿ, ಭೋವಿ ಸಮುದಾಯ ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ, ವಾಲ್ಮೀಕಿ ಸಮುದಾಯದ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗಳು ಹಾಗೂ ಇತರ ಹಿಂದುಳಿದ ಜಾತಿಗಳ ಮಠಗಳ ಸ್ವಾಮೀಜಿಗಳು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

ಹಿಂದಿನ ಜಾತಿಗಣತಿ ವ್ಯವಸ್ಥಿತವಾಗಿ ನಡೆದಿಲ್ಲ; ಹೊಸದಾಗಿ ಸಮೀಕ್ಷೆ ಆಗಬೇಕು: ಬಿಎಸ್ ಯಡಿಯೂರಪ್ಪ

ಜಾತಿ ಗಣತಿ ವರದಿ ನೀಡಲು ಎರಡು ತಿಂಗಳ ಕಾಲಾವಧಿ ವಿಸ್ತರಣೆಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು ಸಾಧ್ಯವಿಲ್ಲ ಎಂದಿದ್ದು, ಈ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರೆಯಲಾಗುವುದು ಎಂದು ಸಿಎಂ, ಮಠಾಧೀಶರಿಗೆ ತಿಳಿಸಿದರು.

ಜಾತಿ ಗಣತಿ ವಿಚಾರದಲ್ಲಿ ಸಿದ್ದರಾಮಯ್ಯ ಯಾರ ಮುಲಾಜಿಗೂ ಒಳಗಾಗಬಾರದು: ಎಚ್. ವಿಶ್ವನಾಥ್

ಇದೇ ಸಂದರ್ಭದಲ್ಲಿ ಮಠಗಳಿಗೆ ಜಮೀನು ಕೊಡುವ ಬಗ್ಗೆ ಸ್ವಾಮೀಜಿಗಳು ಪ್ರಸ್ತಾಪಿಸಿದರು. ತಹಸೀಲ್ದಾರ್ ಅವರಿಗೆ ಈ ಬಗ್ಗೆ ವರದಿ ನೀಡಲು ಸೂಚಿಸಿದ್ದು, ವರದಿಯನ್ನು ಶೀಘ್ರವಾಗಿ ನೀಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.