ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್‌ ಅವರು ನೆರೆಯ ರಾಜ್ಯವನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ಮೇಕೆದಾಟು ಬಗ್ಗೆ ಅಧಿಕಾರಿಗಳು ಅವರಿಗೆ ಇನ್ನೂ ಸಂಪೂರ್ಣ ವಿವರಗಳನ್ನು ತಿಳಿಸಿಲ್ಲ ಎಂದು ಭಾವಿಸುತ್ತೇನೆ ಎಂದ ತಮಿಳುನಾಡಿನ ಜಲಸಂಪನ್ಮೂಲ ಸಚಿವ ಮುರುಗನ್‌

ಚೆನ್ನೈ(ಜೂ.01): ಮೇಕೆದಾಟು ಯೋಜನೆ ಜಾರಿಗೆ ಎಲ್ಲಾ ಸಿದ್ಧತೆ ನಡೆಸುವಂತೆ ಕರ್ನಾಟಕದ ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ನೀಡಿರುವ ಹೇಳಿಕೆಗೆ ತಮಿಳುನಾಡು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

Add Asianetnews Kannada as a Preferred SourcegooglePreferred

ಈ ಕುರಿತು ಬುಧವಾರ ಇಲ್ಲಿ ಪ್ರತಿಕ್ರಿಯೆ ನೀಡಿರುವ ತಮಿಳುನಾಡಿನ ಜಲಸಂಪನ್ಮೂಲ ಸಚಿವ ಮುರುಗನ್‌ ‘ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್‌ ಅವರು ನೆರೆಯ ರಾಜ್ಯವನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ಮೇಕೆದಾಟು ಬಗ್ಗೆ ಅಧಿಕಾರಿಗಳು ಅವರಿಗೆ ಇನ್ನೂ ಸಂಪೂರ್ಣ ವಿವರಗಳನ್ನು ತಿಳಿಸಿಲ್ಲ ಎಂದು ಭಾವಿಸುತ್ತೇನೆ’ ಎಂದಿದ್ದಾರೆ.

ಮಹದಾಯಿ, ಮೇಕೆದಾಟು ಜಾರಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಡಿಕೆಶಿ ತಾಕೀತು

ಮೇಕೆದಾಟು ವಿವಾದ ಬಗೆಹರಿಸಲು ರಚಿಸಲಾದ ಕಾವೇರಿ ಜಲವಿವಾದ ನ್ಯಾಯಾಧೀಕರಣ ಸಮಿತಿಯ ತೀರ್ಪಿನಲ್ಲಾಗಲೀ ಸುಪ್ರೀಂಕೋರ್ಟ್‌ನ ಆದೇಶದಲ್ಲಾಗಲೀ ಈ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಹೀಗಾಗಿ ಈ ಮೇಕೆದಾಟು ಅಥವಾ ಯಾವುದೇ ಅನಧಿಕೃತ ನಿರ್ಮಾಣಗಳು ತಮಿಳುನಾಡಿನ ಹಿತಾಸಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ತಮಿಳುನಡಿನ ಹಕ್ಕು ಆಗಿರುವ ಗಡಿ ಜಲಾನಯನ ಪ್ರದೇಶದಲ್ಲಿ ಮೇಕೆದಾಟು ಅಣೆಕಟ್ಟು ನಿರ್ಮಾಣ ಸ್ವೀಕಾರಾರ್ಹವಲ್ಲ’ ಎಂದಿದ್ದಾರೆ. ಜೊತೆಗೆ ಶೀಘ್ರದಲ್ಲೇ ಡಿಕೆಶಿಯನ್ನು ಭೇಟಿ ಮಾಡುವ ಸಾಧ್ಯತೆ ಇದ್ದು ಆಗ ಮೇಕೆದಾಟು ಬಗ್ಗೆ ಅವರೊಂದಿಗೆ ವಿವರವಾಗಿ ಚರ್ಚಿಸುತ್ತೇನೆ. ಅಲ್ಲಿಯವರೆಗೆ ಅವರು ತಾಳ್ಮೆಯಿಂದ ಇರುತ್ತಾರೆ ಎಂದು ಭಾವಿಸುತ್ತೇನೆ’ ಎಂದರು.