ಕರ್ನಾಟಕದಲ್ಲಿ ಅಕಾಲಿಕ ಮಳೆ: ಸಿಡಿಲು ಬಡಿದು ಇಬ್ಬರ ಸಾವು
ರಾಮನಗರ, ಬೆಂಗಳೂರು ಗ್ರಾಮಾಂತರ, ರಾಯಚೂರು, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ಮಂಡ್ಯ, ಬಳ್ಳಾರಿ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆ.

ಬೆಂಗಳೂರು(ಮಾ.19): ರಾಜ್ಯದಲ್ಲಿ ಅಕಾಲಿಕ ಮಳೆ ಮುಂದುವರಿದಿದ್ದು, ರಾಮನಗರ, ಬೆಂಗಳೂರು ಗ್ರಾಮಾಂತರ, ರಾಯಚೂರು, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ, ಮಂಡ್ಯ, ಬಳ್ಳಾರಿ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ.
ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಸೋನಾಳ ಗ್ರಾಮದಲ್ಲಿ ಸಿಡಿಲಿಗೆ ಲಹು ಮಾಧವರಾವ ಬೀರ್ಗೆ(36) ಎಂಬುವರು ಮೃತಪಟ್ಟಿದ್ದಾರೆ. ಹೊಲದಲ್ಲಿ ಜೋಳ ಶೇಖರಣೆ ಮಾಡುವ ಸಂದರ್ಭದಲ್ಲಿ ಸಿಡಿಲು ಬಡಿಯಿತು. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮೆದಕಿನಾಳ ಗ್ರಾಮದಲ್ಲಿ ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ ಬಿದ್ದು ಭೀರಪ್ಪ ಶಿವರಾಜ (2) ಎನ್ನುವ ಬಾಲಕ ಮೃತಪಟ್ಟಿದ್ದಾನೆ. ಚರಂಡಿಯಲ್ಲಿ ಬಿದ್ದ ಮಗು 200 ಮೀಟರ್ ದೂರದವರೆಗೆ ಹರಿದು ಹೋಗಿದ್ದು, ನೀರಿನ ಪ್ರಮಾಣ ಕಡಿಮೆಯಾದ ಮೇಲೆ ಮೃತದೇಹ ಪತ್ತೆಯಾಗಿದೆ.
ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: ಇನ್ನೂ 5 ದಿನ ಮಳೆ..!
ರಾಮನಗರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸುರಿದ ವರ್ಷದ ಮೊದಲ ಮಳೆಯಿಂದಾಗಿ ರಾಮನಗರ ಹೊರವಲಯದ ಸಂಗಬಸವನದೊಡ್ಡಿ ಬಳಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಜಲಾವೃತಗೊಂಡಿತ್ತು. ಸಿರುಗುಪ್ಪ, ಕುರುಗೋಡು ಸೇರಿ ಬಳ್ಳಾರಿ ಜಿಲ್ಲೆಯ ವಿವಿಧೆಡೆ ಶನಿವಾರ ಮಧ್ಯಾಹ್ನ 45 ನಿಮಿಷಕ್ಕೂ ಹೆಚ್ಚು ಕಾಲ ಸಿಡಿಲು, ಗುಡುಗು ಸಹಿತ ಆಲಿಕಲ್ಲು ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಕಲಬುರಗಿ ಜಿಲ್ಲೆಯ ಹಲವು ಕಡೆ ಸುಮಾರು 1 ತಾಸು ಆಲಿಕಲ್ಲು ಸಹಿತ ಮಳೆಯಾಗಿದೆ. ಅಫ್ಜಲಪುರದಲ್ಲಿ 1 ಸೆಂ.ಮೀ. ಮಳೆಯಾಗಿದೆ.
ಬೀದರ್ನ ಭಾಲ್ಕಿಯ ಕೂಡಲಿಯಲ್ಲಿನ ಕೋಳಿ ಫಾರ್ಮ್ನಲ್ಲಿ ಸಿಡಿಲಿಗೆ ಸಾವಿರಾರು ಕೋಳಿಗಳು ಮೃತಪಟ್ಟಿವೆ. ಕೋಳಿ ಫಾಮ್ರ್ ಶೆಡ್ನ ತಗಡುಗಳು ಹಾರಿ ಹೋಗಿವೆ. ಬೀದರ್ನ ಆಟೋನಗರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆಗೆ ಅಲ್ಲಲ್ಲಿ ವಿದ್ಯುತ್ ಕಂಬಗಳು, ಮರಗಳು ನೆಲಕ್ಕೆ ಉರುಳಿ ಬಿದ್ದಿದ್ದು, ಹಲವು ವಾಹನಗಳಿಗೆ ಹಾನಿ ಸಂಭವಿಸಿದೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಳೆಗೆ ಮರಗಳು ಬಿದ್ದು ಎರಡು ಕಾರುಗಳು ಜಖಂಗೊಂಡಿವೆ. ಹಲವೆಡೆ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಇದೇ ವೇಳೆ, ಚಾಮರಾಜನಗರ, ಬೆಂಗಳೂರು ನಗರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗಿದೆ.