ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ ಬೆಳ್ತಂಗಡಿಯ ರೆಂಕೆದಗುತ್ತುವಿನಲ್ಲಿ ಸಿರಿ ಗ್ರಾಮೋದ್ಯೋಗ ಸಂಸ್ಥೆಗಾಗಿ ನಿರ್ಮಿಸಲಾದ ಸುಸಜ್ಜಿತ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಇಂದು (ಮೇ 31 ರಂದು) ಭಾರತದ ಉಪರಾಷ್ಟ್ರಪತಿಗಳು ಉದ್ಘಾಟನೆಗೊಳ್ಳಲಿದೆ. ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ.
ಬೆಳ್ತಂಗಡಿ (ಮೇ.31): ಹಳ್ಳಿಗಾಡಿನ ಸಾವಿರಾರು ಮಹಿಳೆಯರ ಬದುಕನ್ನು ಹಸನುಗೊಳಿಸಿ ಅವರಿಗೊಂದು ಭದ್ರವಾದ ಬದುಕನ್ನು ಕಟ್ಟಿಕೊಟ್ಟ ಬೆಳ್ತಂಗಡಿ ರೆಂಕೆದಗುತ್ತು ಎಂಬಲ್ಲಿ ಸಿರಿ ಗ್ರಾಮೋದ್ಯೋಗ(Siri Gramodyoga Samsthe Belthangady) ಸಂಸ್ಥೆಗಾಗಿ ನಿರ್ಮಾಣಗೊಂಡಿರುವ ಸುಸಜ್ಜಿತ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನ ಉದ್ಘಾಟನಾ(Matrushree Industrial Park inauguration) ಸಮಾರಂಭವು 31ರಂದು ಪೂರ್ವಾಹ್ನ 10 ಗಂಟೆಗೆ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.
ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ ಕಾರ್ಯಕ್ರಮ ವಿವರ ನೀಡಿದರು.
ಭಾರತದ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಮಾತೃಶ್ರೀ ಇಂಡಸ್ಟಿçಯಲ್ ಪಾರ್ಕ್ ಉದ್ಘಾಟಿಸುವರು.
ಕರ್ನಾಟಕದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಗೌರವ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೆಶ್ ಗುಂಡೂರಾವ್, ಸಂಸದ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್, ಸಿರಿ ಸಂಸ್ಥೆಯ ಅಧ್ಯಕ್ಷೆ ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ರಾಜ್ಯಸಭೆ ಕಾರ್ಯದರ್ಶಿ ಡಾ.ಕೆ.ಎಸ್. ಸೋಮಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಧರ್ಮಸ್ಥಳದಲ್ಲಿ ಉಪರಾಷ್ಟ್ರಪತಿ ರಾಧಾಕೃಷ್ಣನ್ ಗೆ ಸ್ವಾಗತ
ಬೆಳ್ತಂಗಡಿ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ವಾಯುಪಡೆಯ ವಿಶೇಷ ಹೆಲಿಕಾಪ್ಟರ್ನಲ್ಲಿ ಧರ್ಮಸ್ಥಳಕ್ಕೆ ಶನಿವಾರ ಸಂಜೆ ಆಗಮಿಸಿದರು. ಅವರಿಗೆ ಧರ್ಮಸ್ಥಳ ಹೆಲಿಪ್ಯಾಡ್ನಲ್ಲಿ ಗೌರವಪೂರ್ವಕ ಸ್ವಾಗತ ಕೋರಲಾಯಿತು.
ಅವರನ್ನು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಕ್ಷೇತ್ರದ ಪರವಾಗಿ ಸ್ವಾಗತಿಸಿದರು.
ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು. ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಶನಿವಾರ ರಾತ್ರಿ ತಂಗಿದ ಅವರು ಭಾನುವಾರ ಮುಂಜಾನೆ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗುವರು. ಅನ್ನಪೂರ್ಣ ಭೋಜನಾಲಯ ಮತ್ತು ಸಾನ್ನಿಧ್ಯ ಸರದಿ ಸಾಲು ವ್ಯವಸ್ಥೆ (ಕ್ಯೂ ಕಾಂಪ್ಲೆಕ್ಸ್) ವೀಕ್ಷಿಸುವರು. ಪೂರ್ವಾಹ್ನ ೧೦ ಗಂಟೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟಿಸುವರು.


