ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ರೈತ ಭೀಮು ಕೆಂಬಾವಿ ಅವರಿಗೆ ಸೇರಿದ ಐದು ಎಕರೆ ಕಬ್ಬಿನ ಬೆಳೆ ಹಾಗೂ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರೈಲರ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ವಿಜಯಪುರ (ಡಿ.24): ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಜ್ವಾಲೆಗೆ ಐದು ಎಕರೆ ಕಬ್ಬಿನ ಬೆಳೆ ಹಾಗೂ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರೈಲರ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

Add Asianetnews Kannada as a Preferred SourcegooglePreferred

ಟ್ರಾಕ್ಟರ್ ಟ್ರೈಲರ್‌ನಿಂದ ಹಬ್ಬಿದ ಬೆಂಕಿ

ರತ್ನಾಪುರ ಗ್ರಾಮದ ರೈತ ಭೀಮು ಕೆಂಬಾವಿ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಮೊದಲು ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರೈಲರ್‌ಗೆ ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಕೆನ್ನಾಲಿಗೆ ಚಾಚಿದ್ದು, ಟ್ರೈಲರ್‌ನಲ್ಲಿದ್ದ ಕಬ್ಬು ಉರಿಯತೊಡಗಿತು.

5 ಎಕರೆ ಕಬ್ಬಿನ ಬೆಳೆ ಭಸ್ಮ, ರೈತ ಕಂಗಾಲು

ಟ್ರೈಲರ್‌ನಿಂದ ಹಬ್ಬಿದ ಬೆಂಕಿ ಪಕ್ಕದಲ್ಲೇ ಇದ್ದ ಐದು ಎಕರೆ ಕಬ್ಬಿನ ತೋಟಕ್ಕೂ ವ್ಯಾಪಿಸಿದೆ. ನೋಡನೋಡುತ್ತಿದ್ದಂತೆಯೇ ಇಡೀ ಬೆಳೆ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆದಿದ್ದ ಬೆಳೆ ಕಣ್ಣೆದುರೇ ಸುಟ್ಟು ಬೂದಿಯಾಗಿರುವುದನ್ನು ಕಂಡು ರೈತ ಭೀಮು ಕೆಂಬಾವಿ ಕಂಗಾಲಾಗಿದ್ದಾರೆ. ಈ ಅವಘಡದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ತಿಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಘಟನಾ ಸ್ಥಳಕ್ಕೆ ಗ್ರಾಮಸ್ಥರು ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಅಷ್ಟರಲ್ಲೇ ಅಪಾರ ಹಾನಿ ಸಂಭವಿಸಿತ್ತು. ತಿಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.