ಬಿಜೆಪಿ ವಕ್ಫ್ ಆಸ್ತಿ ವಿಚಾರದಲ್ಲಿ ಕೆಟ್ಟ ರಾಜಕಾರಣ ಮಾಡುತ್ತಿದೆ, 2019-2022ರಲ್ಲಿ ಅವರದೇ ಸರ್ಕಾರ ರೈತರಿಗೆ ನೋಟಿಸ್ ನೀಡಿತ್ತು ಎಂದು ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ. ಹಿಜಾಬ್, ಹಲಾಲ್ ವಿಚಾರದಂತೆ ವಕ್ಫ್ ಆಸ್ತಿ ವಿಚಾರವನ್ನೂ ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಬೆಂಗಳೂರು (ಅ.29): ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ಕೆಟ್ಟ ರಾಜಕಾರಣ ಮಾಡುತ್ತಿದೆ. ಆದರೆ 2019ರಿಂದ 2022ರವರೆಗೆ ರಾಜ್ಯದಲ್ಲಿ ಅವರದೇ ಸರಕಾರವಿದ್ದಾಗ ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್ ಮಂಡಳಿ ಮೂಲಕ ನೋಟಿಸ್ ಕೊಡಲಾಗಿತ್ತು. ಆಗ ಇರದ ಹಿಂದೂ ಪ್ರೇಮವನ್ನು ಈಗ ಕಪೋಲಕಲ್ಪಿತ ಸುಳ್ಳುಗಳ ಮೂಲಕ ವ್ಯಕ್ತಪಡಿಸಲಾಗುತ್ತಿದೆ ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಸಂಬಂಧವಾಗಿ ಅವರು ಬಿಜೆಪಿ ಆಡಳಿತದ ಕಾಲದ ನೋಟೀಸುಗಳೊಂದಿಗೆ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಬಿಜೆಪಿಯವರು ತಮ್ಮದೇ ಸರಕಾರವಿದ್ದಾಗ ರಾಜ್ಯದ ಅಭಿವೃದ್ಧಿಯನ್ನು ಮರೆತು ಹಿಜಾಬ್, ಹಲಾಲ್, ಉರಿಗೌಡ-ನಂಜೇಗೌಡ ಎಂದು ನಾಟಕವಾಡಿದರು. ಈಗ ವಕ್ಫ್ ಆಸ್ತಿ ಹೆಸರಿನಲ್ಲಿ ಆ ನಾಟಕವನ್ನು ಮುಂದುವರಿಸಲಾಗುತ್ತಿದೆ. ಸುಳ್ಳಿನ ಕಂತೆ ಕಟ್ಟಿ ಜನರ ಕಣ್ಣಿಗೆ ಮಣ್ಣೆರಚುವ ಇವರ ಕುತಂತ್ರ ಇಲ್ಲಿ ನಡೆಯುವುದಿಲ್ಲ ಎಂದು ಕುಟುಕಿದ್ದಾರೆ.

ಇದನ್ನೂ ಓದಿ: ಇಲ್ಲಿ ಆಸ್ತಿ ಮಾಡೋಕೆ ಅಲ್ಲಾ ಏನು ಭಾರತದವನಾ? ನೋಟೀಸ್ ಕೊಡೋಕೆ ಇವರಪ್ಪನ ಮನೆ ಆಸ್ತೀನಾ? ಪ್ರಹ್ಲಾದ್ ಜೋಶಿ!

ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ರಚಿಸಿರುವ ಸತ್ಯ ಶೋಧನಾ ಸಮಿತಿಯನ್ನು ಅವರದೇ ಪಕ್ಷದ ಬಸನಗೌಡ ಪಾಟೀಲ ಯತ್ನಾಳ ಅವರು ಹಿಗ್ಗಾಮುಗ್ಗಾ ಟೀಕಿಸಿದ ಮೇಲೆ ಪುನಾರಚಿಸಲಾಗಿದೆ. ಇಷ್ಟೆಲ್ಲ ಆದಮೇಲೆ ಯತ್ನಾಳ್ ಜೊತೆಗೆ ಸಂಸದ ರಮೇಶ ಜಿಗಜಿಣಗಿ ಅವರುಗಳನ್ನು ಸೇರಿಸಿದಂತೆ ನಟಿಸಲಾಗಿದೆ. ಇದು ಆ ಪಕ್ಷದ ದುಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಇದನ್ನು ಬಿಟ್ಟು, ತಮ್ಮ ಸರಕಾರದ ಅವಧಿಯಲ್ಲಿ ನಮ್ಮ ರೈತರಿಗೆ ಕೊಟ್ಟ ನೋಟೀಸುಗಳಿಗೆ ಮೊದಲು ಉತ್ತರ ಕೊಡಲಿ ಎಂದು ಆಗ್ರಹಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ಎಂದು ಹೇಳಿ ಯಾವ ರೈತರಿಗೂ ನೋಟಿಸ್ ಕೊಟ್ಟಿಲ್ಲ. ಇಲ್ಲದ ಸಮಸ್ಯೆಯನ್ನು ಹುಟ್ಟುಹಾಕುತ್ತಿರುವ ಬಿಜೆಪಿ ನಾಯಕರು ತಮ್ಮ ನಡುವೆ ಇರುವ ಸಮಸ್ಯೆಗಳನ್ನು ಮೊದಲು ಬಗೆಹರಿಸಿಕೊಳ್ಳಲಿ ಎಂದು ಅವರು ವ್ಯಂಗ್ಯವಾಡಿದ್ದಾರೆ.

Scroll to load tweet…