ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ಹೈಕೋರ್ಟ್ ಆದೇಶದಂತೆ ನಡೆದ ಮರು ಎಣಿಕೆಯನ್ನು ಪ್ರಶ್ನಿಸಿ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂನಲ್ಲಿ ನಿರ್ಣಾಯಕವಾಗಲಿದೆ.

ಚಿಕ್ಕಮಗಳೂರು (ಮೇ.21): ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಗುರುವಾರ ವಿಚಾರಣೆ ನಡೆಯಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೇ 2ರಂದು ನಡೆದ ಮರು ಮತ ಎಣಿಕೆ ವೇಳೆ ಅಂಚೆ ಮತಪತ್ರ ತಿರುಚಲಾಗಿದೆ ಎಂದು ಆರೋಪಿಸಿ, ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಮೇ 11ರಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಮರು ಮತ ಎಣಿಕೆ ಪ್ರಕ್ರಿಯೆ ಮತ್ತು ಅದರಿಂದ ಬಂದ ಫಲಿತಾಂಶಕ್ಕೆ ಮಧ್ಯಂತರ ತಡೆ ನೀಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಯಥಾ ಸ್ಥಿತಿ ಕಾಯ್ದುಕೊಳ್ಳುವಂತೆ ಮತ್ತು ಮರು ಎಣಿಕೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಇದರಿಂದಾಗಿ ರಾಜೇಗೌಡರ ಶಾಸಕತ್ವ ಊರ್ಜಿತಗೊಂಡಿತ್ತು.

ಮೇ 21ರಂದು, ಗುರುವಾರ ಅರ್ಜಿಯ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿತ್ತು. ಅದರಂತೆ ನ್ಯಾ.ಸಂಜಯ್ ಕುಮಾರ್‌ ಮತ್ತು ನ್ಯಾ.ವಿನೋದ ಚಂದ್ರ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಗುರುವಾರ ವಿಚಾರಣೆ ನಡೆಯಲಿದೆ.

ಪ್ರಕರಣವೇನು?:

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ರಾಜೇಗೌಡ ಅವರು ಬಿಜೆಪಿಯ ಡಿ.ಎನ್‌.ಜೀವರಾಜ್‌ ವಿರುದ್ಧ 201 ಮತಗಳ ಅಂತರದಿಂದ ಜಯ ಗಳಿಸಿದ್ದರು. ಆದರೆ, ಜೀವರಾಜ್‌ ಅವರು ಚುನಾವಣಾ ಅಕ್ರಮಗಳ ಆರೋಪ ಹೊರಿಸಿ ಅಂಚೆ ಮತಗಳ ಮರು ಎಣಿಕೆಗೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ್ದ ಹೈಕೋರ್ಟ್‌, ಅಂಚೆ ಮತಗಳನ್ನು ಮರು ಎಣಿಕೆ ಮಾಡುವಂತೆ ಸೂಚಿಸಿತ್ತು. ಅದರಂತೆ ಮೇ 2ರಂದು ಅಂಚೆ ಮತಗಳ ಮರು ಎಣಿಕೆ ನಡೆಸಲಾಗಿತ್ತು. ಆ ವೇಳೆ, ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಅವರು 52 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಬಳಿಕ, ಅವರು ಶಾಸಕರಾಗಿ ಪ್ರಮಾಣವಚನವನ್ನೂ ಕೂಡ ಪಡೆದಿದ್ದರು.