ನೈತಿಕ ಪೊಲೀಸ್‌ಗಿರಿ ಮಾಡಿದರೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದರು. ಈಗ ಅಲ್ಪಸಂಖ್ಯಾತ ಮಹಿಳೆಯ ಮೇಲೆಯೇ ದೌರ್ಜನ್ಯ ಆಗಿದೆ‌. ಅವರಿಗೆ ರಕ್ಷಣೆ ಕೊಡಲು ಆಗುತ್ತಿಲ್ಲ. ಈ ಪ್ರಕರಣದಲ್ಲಿ ಎಲ್ಲ ಆಯಾಮದಲ್ಲೂ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ತಮ್ಮ ನಿಲುವು ಪ್ರಕಟಿಸಬೇಕು ಎಂದು ಒತ್ತಾಯಿಸಿದ ಮಾಜಿ ಮುಖಮಂತ್ರಿ ಬಸವರಾಜ ಬೊಮ್ಮಾಯಿ 

ಬೆಂಗಳೂರು(ಜ.12):  ನೈತಿಕ ಪೊಲೀಸ್ ಗಿರಿ ವಿರುದ್ಧ ಯಾವಾಗಲೂ ಮಾತನಾಡುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿರುವ ನೈತಿಕ ಪೊಲೀಸ್‌ಗಿರಿ ಬಗ್ಗೆ ಯಾಕೆ ಮೌನ ವಹಿಸಿದ್ದಾರೆ ಎಂದು ಮಾಜಿ ಮುಖಮಂತ್ರಿ ಬಸವರಾಜ ಬೊಮ್ಮಾಯಿ ಖಾರವಾಗಿ ಪ್ರಶ್ನಿಸಿದ್ದಾರೆ.

Add Asianetnews Kannada as a Preferred SourcegooglePreferred

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೈತಿಕ ಪೊಲೀಸ್‌ಗಿರಿ ಮಾಡಿದರೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದರು. ಈಗ ಅಲ್ಪಸಂಖ್ಯಾತ ಮಹಿಳೆಯ ಮೇಲೆಯೇ ದೌರ್ಜನ್ಯ ಆಗಿದೆ‌. ಅವರಿಗೆ ರಕ್ಷಣೆ ಕೊಡಲು ಆಗುತ್ತಿಲ್ಲ. ಈ ಪ್ರಕರಣದಲ್ಲಿ ಎಲ್ಲ ಆಯಾಮದಲ್ಲೂ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ತಮ್ಮ ನಿಲುವು ಪ್ರಕಟಿಸಬೇಕು ಎಂದು ಒತ್ತಾಯಿಸಿದರು.

ಹಿಂದೂ-ಮುಸ್ಲಿಂ ಹುಡುಗ ಹುಡುಗಿಯರೇ ಹುಷಾರ್, ಎಗ್ಗಿಲ್ಲದೆ ನಡೀತಿದೆ ನೈತಿಕ ಪೊಲೀಸ್‌ಗಿರಿ..!

ಅಲ್ಪಸಂಖ್ಯಾತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆಗಿರುವ ಆರೋಪ ಕೇಳಿ ಬಂದಿದ್ದು, ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸಿ, ಪೊಲೀಸರು ಎಲ್ಲ ಆಯಾಮದಲ್ಲಿಯೂ ತನಿಖೆ ನಡೆಸಿ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡಬೇಕು. ವಿಭಿನ್ನ ಕೋಮಿನವರು ಒಂದು ರೂಮಿನಲ್ಲಿ ಇದ್ದಾಗ ಅವರ ಮೇಲೆ ಹಲ್ಲೆಯಾಗಿದೆ. ಗ್ಯಾಂಗ್ ರೇಪ್ ಆಗಿದೆ ಅಂತ ಆರೋಪ ಇದೆ. ಈ ಬಗ್ಗೆ ಹಾವೇರಿ ಪೊಲೀಸ್ ವರಿಷ್ಠರ ಜೊತೆ ಮಾತನಾಡಿದ್ದೇನೆ‌. ಅವರು ಅದನ್ನು ಅಲ್ಲಗಳೆಯುತ್ತಿದ್ದಾರೆ. ಆದರೆ, ತಕ್ಷಣ ಮಹಿಳೆಗೆ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಆಗ್ರಹಿಸಿದ್ದೇನೆ ಎಂದರು.