ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ಕುರಿತಾದ ಅಂತಿಮ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏ.15ಕ್ಕೆ ಮುಂದೂಡಿದೆ. ಎಂಟು ವರ್ಷಗಳ ಕಾಲ ನಡೆದ ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಿತ್ತು. 

ಧಾರವಾಡ (ಏ.9): ಕಳೆದ ಎಂಟು ವರ್ಷಗಳಿಂದ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಶಾಸಕ ವಿನಯ್‌ ಕುಲಕರ್ಣಿ ಕುರಿತಾದ ಅಂತಿಮ ತೀರ್ಪು ಮುಂದೂಡಿಕೆ ಮಾಡಲಾಗಿದೆ. ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ನೀಡಲಿದೆ ಎನ್ನಲಾಗಿತ್ತಾದರೂ, ಬಳಿಕ ತೀರ್ಪನ್ನು ಏಪ್ರಿಲ್‌ 15ಕ್ಕೆ ಮುಂದೂಡಿಕೆ ಮಾಡುವ ತೀರ್ಮಾನ ಮಾಡಿದೆ. 

Add Asianetnews Kannada as a Preferred SourcegooglePreferred

ಪ್ರಕರಣದ ಹಿನ್ನೆಲೆ

ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು 2016ರ ಜೂ.15ರಂದು ಭೀಕರವಾಗಿ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಧಾರವಾಡದ ಉಪನಗರ ಪೊಲೀಸರು ತನಿಖೆ ನಡೆಸಿ, ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಆರು ಮಂದಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ನಡುವೆ, ಕೊಲೆಯಾದ ಯೋಗೇಶ್‌ ಗೌಡ ಕುಟುಂಬದ ಸದಸ್ಯರ ಒತ್ತಾಯ ಮೇರೆಗೆ 2019ರ ಸೆಪ್ಟೆಂಬರ್‌ನಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಬಳಿಕ ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ತಿಳಿದು ಬಂದಿತ್ತು.

ಈ ಸಂಬಂಧ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರನ್ನು 2020ರ ನ.5ರಂದು ಸಿಬಿಐ ಬಂಧಿಸಿತ್ತು. ಬಳಿಕ ವಿಚಾರಣೆ ನಡೆಸಿ ಈ ಪ್ರಕರಣ ಸಂಬಂಧ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿತ್ತು. ಪ್ರಸ್ತುತ ಪ್ರಮುಖ ಆರೋಪಿ ವಿನಯ್‌ ಕುಲಕರ್ಣಿ ಜಾಮೀನಿನ ಮೇಲೆ ಹೊರಗಿದ್ದರು.ಇಂದಿನ ನ್ಯಾಯಾಲಯದ ತೀರ್ಪಿನ ಬಳಿಕ ಈ 21 ಆರೋಪಿಗಳಿಗೆ ಜೈಲು ಶಿಕ್ಷೆ ಖಾಯಂ ಆಗಿದೆ.