ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ, ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ಗೆ ಮಧ್ಯಂತರ ಮನವಿ ಸಲ್ಲಿಸಿದ್ದಾರೆ. ಈ ಮನವಿಯ ಕುರಿತ ತೀರ್ಪನ್ನು ಹೈಕೋರ್ಟ್ ಶುಕ್ರವಾರ ಪ್ರಕಟಿಸಲಿದೆ.
ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ತಮಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶ ಅಮಾನತ್ತಿನಲ್ಲಿಟ್ಟು, ಜಾಮೀನು ನೀಡಬೇಕೆಂಬ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಮಧ್ಯಂತರ ಮನವಿ ಕುರಿತ ತೀರ್ಪನ್ನು ಹೈಕೋರ್ಟ್ ಶುಕ್ರವಾರ ಪ್ರಕಟಿಸಲಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ತಮಗೆ ಜೀವಾವಧಿ ಶಿಕ್ಷೆ ವಿಧಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಹೈಕೋರ್ಟ್ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದಾರೆ. ಹಾಗೆಯೇ, ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ಮಂಜೂರು ಮಾಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ.
ಈ ಮಧ್ಯಂತರ ಮನವಿ ಕುರಿತು ಕುಲಕರ್ಣಿ ಹಾಗೂ ಸಿಬಿಐ ಪರ ವಕೀಲರ ವಾದ ಆಲಿಸಿ ಜು.9ರಂದು ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಮತ್ತು ನ್ಯಾಯಮೂರ್ತಿ ಜಿ.ಬಸವರಾಜ ಅವರ ಪೀಠ ಶುಕ್ರವಾರ ಪ್ರಕಟಿಸಲಿದೆ.
ಪ್ರಕರಣದ ಹಿನ್ನೆಲೆ:
2016ರಲ್ಲಿ ನಡೆದಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ವಿನಯ್ ಕುಲಕರ್ಣಿ ಸೇರಿ ಒಟ್ಟು 17 ಮಂದಿ ಆರೋಪಿಗಳನ್ನು 2026ರ ಏ.15ರಂದು ಅಪರಾಧಿಗಳು ಎಂದು ನಿರ್ಧರಿಸಿ, ಏ.17ರಂದು ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಮುಂದೇನು?
ಶಿಕ್ಷೆ ರದ್ದಾದರೆ ಶಾಸಕ ಸ್ಥಾನ ಉಳಿಯುವ ಜೊತೆಗೆ. ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಶಿಕ್ಷೆ ರದ್ದಾಗದಿದ್ದರೆ ಮುಂದಿನ ಹಂತದಲ್ಲಿ ವಿನಯ್ ಕುಲಕರ್ಣಿಯವರು ಮೇಲಿನ ಹಂತದ ನ್ಯಾಯಾಲಯಕ್ಕೆ ಅಂದರೆ, ಸುಪ್ರೀಂ ಕೋರ್ಟ್ ಮೊರೆ ಹೋಗುವ ಅವಕಾಶವಿದೆ. ಅಲ್ಲಿಯೂ ಇದೇ ತೀರ್ಪು ಬಂದರೆ ಜೀವಾವಧಿ ಶಿಕ್ಷೆ ಅನುಭವಿಸಲೇಬೇಕು. ಇದರ ಜೊತೆಗೆ ಶಾಸಕ ಸ್ಥಾನ ರದ್ದಾಗಿರುವುದರಿಂದ ವಿನಯ್ ಶಾಸಕರಾಗಿ ಆಯ್ಕೆಯಾದ ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ.
ಇತ್ತ ಉಪ ಚುನಾವಣೆ ನಡೆದರೆ ಕಾಂಗ್ರೆಸ್ನಿಂದ ವಿನಯ್ ಕುಲಕರ್ಣಿ ಪತ್ನಿಗೆ ಟಿಕೆಟ್ ನೀಡುವ ಸಾಧ್ಯತೆ ಜಾಸ್ತಿ ಇದೆ. ಪತ್ನಿ ನಿರಾಕರಿಸಿದರೆ ಪುತ್ರಿಯರು ಸ್ಪರ್ಧೆ ಮಾಡುವ ಸಾಧ್ಯತೆಯೂ ಇದೆ. ಇತ್ತೀಚೆಗೆ ಉಪ ಚುನಾವಣೆ ಚರ್ಚೆ ವೇಳೆ ಪತ್ನಿಯ ಹೆಸರು ಮುಂಚೂಣಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ. ಇಂದಿನ ತೀರ್ಪು ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.


