ಕೇಂದ್ರದಿಂದ ಕರ್ನಾಟಕಕ್ಕೆ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂಬ ರಾಜ್ಯ ಸರ್ಕಾರದ ಆರೋಪಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿರುಗೇಟು ನೀಡಿದ್ದಾರೆ. ರಾಜ್ಯಗಳಿಗೆ ಅನುದಾನ ನಿಗದಿ ಮಾಡುವುದು ಹಣಕಾಸು ಆಯೋಗವೇ ಹೊರತು ಕೇಂದ್ರ ಸರ್ಕಾರವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಹೆಚ್ಚು ತೆರಿಗೆ ಕೊಡ್ತಾ ಇದ್ದೀವಿ ಅಂದ ಮಾತ್ರಕ್ಕೆ ಹೆಚ್ಚು ಅನುದಾನ ಕೊಟ್ಟಿಲ್ಲ ಎನ್ನುವುದು ಸರಿಯಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಈ ಮೂಲಕ ಹೆಚ್ಚಿನ ತೆರಿಗೆ ಕಟ್ಟುವ ಕರ್ನಾಟಕಕ್ಕೆ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂಬ ರಾಜ್ಯದ ಕಾಂಗ್ರೆಸ್‌ ನಾಯಕರ ದೂರಿಗೆ ತಿರುಗೇಟು ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ದೊಡ್ಡಬಳ್ಳಾಪುರ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ ವೀಕ್ಷಣೆ ಬಳಿಕ ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ‘ನಾವು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ನೀಡುತ್ತಿದ್ದರೂ ಕೇಂದ್ರ ನಮಗೆ ಹೆಚ್ಚಿನ ಅನುದಾನ ಕೊಡುತ್ತಿಲ್ಲ, ಅನುದಾನ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ’ ಎಂಬ ರಾಜ್ಯ ಸರ್ಕಾರದ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ರಾಜ್ಯಗಳಿಗೆ ಎಷ್ಟು ಅನುದಾನ ಹಂಚಿಕೆ ಮಾಡಬೇಕು ಎಂದು ನಿರ್ಧರಿಸುವುದು ಹಣಕಾಸು ಆಯೋಗ, ಕೇಂದ್ರ ಸರ್ಕಾರವಲ್ಲ. 

ಹಣಕಾಸು ಆಯೋಗದ ನಿರ್ಧಾರ

ತನ್ನದೇ ಆದ ಕೆಲವು ಮಾನದಂಡಗಳಡಿ ಯಾವ ರಾಜ್ಯಕ್ಕೆ ಎಷ್ಟು ಪ್ರಮಾಣದ ಅನುದಾನವನ್ನು ಹಂಚಿಕೆ ಮಾಡಬೇಕು ಎಂಬುದನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ. ಆಯೋಗದ ನಿರ್ಧಾರದಂತೆ ಮುಂದಿನ ಐದು ವರ್ಷಗಳ ಅವಧಿಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅನುದಾನದ ಹಣವನ್ನು ಬಿಡುಗಡೆ ಮಾಡುತ್ತದೆ. ರಾಜ್ಯ ಸರ್ಕಾರಗಳು ಪಾವತಿಸುವ ತೆರಿಗೆಯ ಎಲ್ಲಾ ಹಣವನ್ನು ಮರಳಿ ರಾಜ್ಯಗಳಿಗೆ ನೀಡಬೇಕು ಎಂಬ ವಾದ ಸರಿಯಲ್ಲ ಎಂದರು.

ಹೆಚ್ಚು ತೆರಿಗೆ ಪಾಲು ಕೊಡ್ತಾ ಇದೀವಿ ಅಂದ ಮಾತ್ರಕ್ಕೆ ಹೆಚ್ಚು ಅನುದಾನ ಕೊಟ್ಟಿಲ್ಲ ಅನ್ನೋದು ಸರಿಯಲ್ಲ. ರಾಜ್ಯದಲ್ಲಿ ಕಲಬುರಗಿ, ಯಾದಗಿರಿಯಂತಹ ಪ್ರದೇಶಗಳಿಂದಲೂ ತೆರಿಗೆ ಸಂಗ್ರಹ ಆಗುತ್ತದೆ. ಆದರೆ, ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡಲಾಗುತ್ತೆ, ಇದು ಯಾಕೆ ಎಂದು ಪ್ರಶ್ನಿಸಿದರು.

ಚಿಕ್ಕಬಳ್ಳಾಪುರ ಭಾಗದಲ್ಲಿ ಅತಿ ಹೆಚ್ಚು ಹೂವು-ಹಣ್ಣು ಬೆಳೆಯಲಾಗುತ್ತಿದ್ದು, ಕೋಲ್ಡ್‌ ಸ್ಟೋರೇಜ್‌ ಕೊರತೆ ಕಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರದಿಂದ ಈ ಬಗ್ಗೆ ಬೇಡಿಕೆಯೇ ಬಂದಿಲ್ಲ. ಬಜೆಟ್ ನಲ್ಲಿ ಹಣ ಇದೆ, ಆದರೆ, ರಾಜ್ಯ ಸರ್ಕಾರ ಬೇಡಿಕೆ ಇಟ್ಟಿಲ್ಲ ಎಂದರು.

ಇದನ್ನೂ ಓದಿ: Gautami Tadimalla: ಬಿಜೆಪಿ ಬಳಿಕ ಎಐಎಡಿಎಂಕೆಗೂ ಗುಡ್‌ಬೈ: ಹಿರಿಯ ನಟಿ ಗೌತಮಿ ಹಠಾತ್ ರಾಜೀನಾಮೆ ಯಾಕೆ?