ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷಗಳಲ್ಲಿ 10 ನಾವಿಕರು ಸೇರಿದಂತೆ ಒಟ್ಟು 16 ಭಾರತೀಯ ನಾಗರಿಕರು ಮೃತಪಟ್ಟಿದ್ದು, 75 ಮಂದಿ ಗಾಯಗೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಮಾಹಿತಿ ನೀಡಿದೆ. ಅಧಿಕೃತ ಮಾಹಿತಿಯಲ್ಲೇನಿದೆ? ತಿಳಿಯಿರಿ.

ಪಶ್ಚಿಮ ಏಷ್ಯಾ(West Asia)ದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಇದುವರೆಗೆ 16 ಭಾರತೀಯ ನಾಗರಿಕರು ಪ್ರಾಣ ಕಳೆದುಕೊಂಡಿದ್ದು, 75 ಮಂದಿ ಗಾಯಗೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಅಧಿಕೃತವಾಗಿ ತಿಳಿಸಿದೆ. ಈ ಭಾಗದಲ್ಲಿನ ಉದ್ವಿಗ್ನತೆಯು ಭಾರತೀಯರ ಮೇಲೂ ಗಂಭೀರ ಪರಿಣಾಮ ಬೀರುತ್ತಿರುವುದಕ್ಕೆ ಈ ಅಂಕಿಅಂಶಗಳು ಸಾಕ್ಷಿಯಾಗಿವೆ. 

ಮೃತಪಟ್ಟ 16 ಭಾರತೀಯರ ಪೈಕಿ 10 ಮಂದಿ ನಾವಿಕರು

ಮೃತಪಟ್ಟ 16 ಭಾರತೀಯರ ಪೈಕಿ 10 ಮಂದಿ ನಾವಿಕರಾಗಿದ್ದರು ಎಂಬುದು ಗಮನಿಸಬೇಕಾದ ಅಂಶ. ಈ ಮೂಲಕ ಸಂಘರ್ಷವು ಕೇವಲ ಭೂಪ್ರದೇಶಕ್ಕೆ ಸೀಮಿತವಾಗಿಲ್ಲ, ಸಮುದ್ರಯಾನದ ಮೇಲೂ ಕೆಟ್ಟ ಪರಿಣಾಮ ಬೀರಿದೆ ಎಂಬುದು ಸ್ಪಷ್ಟವಾಗಿದೆ. ಪ್ರಸ್ತುತ ಗಾಯಗೊಂಡ 75 ಮಂದಿ ವಿವಿಧ ದೇಶಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂತ್ರಸ್ತರಿಗೆ ನೆರವು, ಮೃತದೇಹಗಳ ರವಾನೆಗೆ ಕ್ರಮ

ಈ ದುರಂತ ಘಟನೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ ಸಂತ್ರಸ್ತ ಕುಟುಂಬಗಳಿಗೆ ಎಲ್ಲ ರೀತಿಯ ನೆರವು ನೀಡಲು ಸರ್ಕಾರ ಬದ್ಧವಾಗಿರುವುದಾಗಿ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳಿಗೆ ಈ ಸಂಬಂಧ ಸ್ಪಷ್ಟ ನಿರ್ದೇಶನಗಳನ್ನು ರವಾನಿಸಲಾಗಿದೆ. ರಾಯಭಾರ ಕಚೇರಿಗಳು ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿವೆ. ಮೃತಪಟ್ಟವರ ಪಾರ್ಥಿವ ಶರೀರಗಳನ್ನು ಆದಷ್ಟು ಬೇಗ ಭಾರತಕ್ಕೆ ವಾಪಸ್ ಕಳುಹಿಸಲು ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಇದಲ್ಲದೆ, ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತೀಯರಿಗೆ ಸೂಕ್ತ ವೈದ್ಯಕೀಯ ನೆರವು ಮತ್ತು ಇತರ ಸಹಾಯಗಳನ್ನು ಒದಗಿಸಲು ರಾಯಭಾರ ಕಚೇರಿಯ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ ಎಂದು ಸರ್ಕಾರ ಸಂಸತ್ತಿಗೆ ವಿವರಿಸಿದೆ.