ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಫೋಟೋ ಫ್ರೇಮ್‌ನಲ್ಲಿ ಅಡಗಿಸಿ ಸಾಗಿಸುತ್ತಿದ್ದ 39.37 ಲಕ್ಷ ಮೌಲ್ಯದ ಹೈಡ್ರೋ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮತ್ತೊಂದು ಘಟನೆಯಲ್ಲಿ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ.

 ಬೆಂಗಳೂರು (ಮಾ.17): ವಿದೇಶದಿಂದ ಪೋಟೋ ಫ್ರೇಮ್‌ನಲ್ಲಿ ಅಡಗಿಸಿ ಸಾಗಿಸಲು ಯತ್ನಿಸಿದ್ದ 39.37 ಲಕ್ಷ ರು. ಮೌಲ್ಯದ ಹೈಡ್ರೋ ಗಾಂಜಾವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಬ್ಯಾಂಕಾಕ್‌ನಿಂದ ಕೆಐಎಗೆ ಶನಿವಾರ ಬಂದಿಳಿದ ಪ್ರಯಾಣಿಕನನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು, ಬಳಿಕ ಆತನ ಬಳಿ 39.37 ಲಕ್ಷ ರು. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ.

ಬ್ಯಾಂಕಾಕ್‌ನಿಂದ ಗಾಂಜಾ ಕಳ್ಳ ಸಾಗಾಣಿಕೆ ಬಗ್ಗೆ ಮಾಹಿತಿ ಸಿಕ್ಕಿತು. ಅಂತೆಯೇ ಅಲ್ಲಿಂದ ಶನಿವಾರ ಆಗಮಿಸಿದ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಯಿತು. ಈ ವೇಳೆ ಶಂಕೆ ಮೇರೆಗೆ ಒಬ್ಬಾತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಗಾಂಜಾ ಪತ್ತೆಯಾಯಿತು. ಆತನ ಬ್ಯಾಗ್‌ನಲ್ಲಿದ್ದ ಪೋಟೋ ಅನ್ನು ಒಡೆದು ಹಾಕಿದಾಗ ಅದರಲ್ಲಿ ಅಡಗಿಸಿಟ್ಟಿದ್ದ ಗಾಂಜಾ ಸಿಕ್ಕಿದೆ ಎಂದು ಕಸ್ಟಮ್ಸ್ ಹೇಳಿದೆ.

ತರಕಾರಿ ಕತ್ತರಿಸುವ ಚಾಕುವಿಂದ ಪತ್ನಿ ಕತ್ತು ಕೊಯ್ದ

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿ ಕೊಂದಿದ್ದ ಖಾಸಗಿ ಸಂಸ್ಥೆ ಕಾವಲುಗಾರನೊಬ್ಬನನ್ನು ಮೈಕೋ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಿಳೇಕಹಳ್ಳಿ ನಿವಾಸಿ ರಂಗವ್ವ ಹತ್ಯೆಯಾದ ದುರ್ದೈವಿ. ಈ ಕೊಲೆ ಸಂಬಂಧ ನಾಗರಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕೌಟುಂಬಿಕ ವಿಚಾರವಾಗಿ ಭಾನುವಾರ ರಾತ್ರಿ ದಂಪತಿ ಮಧ್ಯೆ ಜಗಳವಾಗಿದೆ. ಆಗ ಕೆರಳಿದ ಆರೋಪಿ, ತನ್ನ ಪತ್ನಿ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದು ಪರಾರಿಯಾಗಿದ್ದ. ಈ ಕೃತ್ಯ ಬೆಳಕಿಗೆ ಬಂದ ಕೆಲವೇ ತಾಸುಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಕೆಲ ವರ್ಷಗಳ ಹಿಂದೆ ಉದ್ಯೋಗ ಅರಸಿ ನಗರಕ್ಕೆ ತಮ್ಮ ಪರಿವಾರ ಸಮೇತ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ನಾಗರಾಜ್‌ ಬಂದಿದ್ದರು. ಬಳಿಕ ಖಾಸಗಿ ಸಂಸ್ಥೆಯಲ್ಲಿ ಆತ ಕಾವಲುಗಾರನಾಗಿದ್ದರೆ, ಅವರ ಪುತ್ರ ಕ್ಯಾಂಟರಿಂಗ್ ಕೆಲಸ ಮಾಡುತ್ತಿದ್ದಾರೆ. ಪ್ರತಿ ದಿನ ಮನೆಗೆ ಮದ್ಯ ಸೇವಿಸಿ ಬಂದು ಸಣ್ಣಪುಟ್ಟ ವಿಚಾರಗಳಿಗೆ ಪತ್ನಿ ಜತೆ ನಾಗರಾಜ್ ಗಲಾಟೆ ಮಾಡುತ್ತಿದ್ದ. ಅಂತೆಯೇ ಭಾನುವಾರ ರಾತ್ರಿ ಪತ್ನಿ ಮೇಲೆ ಆತ ರಂಪಾಟ ಮಾಡಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕೆರಳಿದ ಆರೋಪಿ, ಮನೆಯಲ್ಲಿದ್ದ ತರಕಾರಿ ಕತ್ತರಿಸಲಿಟ್ಟಿದ್ದ ಚಾಕುವಿನಿಂದ ಪತ್ನಿ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಾನೆ ಎಂದು ಮೂಲಗಳು ಹೇಳಿವೆ.