ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದು ಈ ವೇಳೆ ಹಲವು ಒಪ್ಪಂದಗಳನ್ನು ಎರಡು ದೇಶಗಳ ನಡುವೆ ಮಾಡಿಕೊಳ್ಳಲಾಗಿದೆ. ಇನ್ನು  ಇದೇ ವೇಳೆ ಹೊಸ ರೈಲು ಸಂಚಾರಕ್ಕೂ ಚಾಲನೆ ನೀಡಲಾಗಿದೆ. 

ಢಾಕಾ (ಮಾ.28):  ಬಾಂಗ್ಲಾದೇಶಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬಾಂಗ್ಲಾ ಪ್ರಧಾನಿ ಶೇಖ್‌ ಹಸೀನಾ ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಿದರು. ಈ ವೇಳೆ ಭಾರತ- ಮತ್ತು ಬಾಂಗ್ಲಾದೇಶದ ಮಧ್ಯೆ ವಿಪತ್ತು ನಿರ್ವಹಣೆ, ಯುವಜನ ಹಾಗೂ ಕ್ರೀಡೆ, ವ್ಯಾಪಾರ ವಹಿವಾಟು, ಸಂಪರ್ಕ ಮತ್ತು ಸಹಕಾರಕ್ಕೆ ಸಂಬಂಧಿಸಿದಂತೆ ಐದು ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಈ ಸಂದರ್ಭದಲ್ಲಿ ಬಾಂಗ್ಲಾದೇಶ ವಿಮೋಚನೆಗೊಂಡ 50ನೇ ವರ್ಷಾಚರಣೆಯ ನಿಮಿತ್ತ ಅಂಚೆ ಚೀಟಿ, ಬೆಳ್ಳಿ ನಾಣ್ಯವನ್ನು ಬಿಡುಗಡೆ ಮಾಡಲಾಯಿತು.

Add Asianetnews Kannada as a Preferred SourcegooglePreferred

ಭಾರತ- ಬಾಂಗ್ಲಾ ಮಧ್ಯೆ ನೂತನ ರೈಲು:

ಇದೇ ವೇಳೆ ಮೋದಿ ಹಾಗೂ ಶೇಕ್‌ ಹಸೀನಾ ಅವರು ಪಶ್ಚಿಮ ಬಂಗಾಳದ ನ್ಯೂ ಜಲ್‌ಪೈಗುರಿ ಮತ್ತು ಬಾಂಗ್ಲಾದೇಶದ ರಾಜಧಾನಿ ಢಾಕಾ ಮಧ್ಯೆ ಸಂಪರ್ಕ ಕಲ್ಪಿಸುವ ನೂತನ ಪ್ಯಾಸೆಂಜರ್‌ ರೈಲಿಗೆ ಜಂಟಿಯಾಗಿ ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಚಾಲನೆ ನೀಡಿದರು. ಭಾರತ ಮತ್ತು ಬಾಂಗ್ಲಾ ನಡುವಿನ 3ನೇ ಪ್ಯಾಸೆಂಜರ್‌ ರೈಲು ಇದಾಗಿದೆ.

ಮೋದಿ ಬಾಂಗ್ಲಾ ಪ್ರವಾಸಕ್ಕೆ ಕೆರಳಿದ ಮಮತಾ; ಆಯೋಗಕ್ಕೆ ದೂರು ನೀಡಲು ಮುಂದಾದ ಸಿಎಂ! ..

ಸಭೆಯ ಬಳಿಕ ಟ್ವೀಟ್‌ ಮಾಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ, ಪ್ರಧಾನಿ ಮೋದಿ ಹಾಗೂ ಶೇಖ್‌ ಹಸೀನಾ ಸುಮಾರು ಒಂದು ಗಂಟೆಗಳ ಕಾಲ ಆರೋಗ್ಯ, ವ್ಯಾಪಾರ ವಹಿವಾಟು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಉಭಯ ದೇಶಗಳ ನಡುವಿನ ಸಂಬಂಧ ಇನ್ನಷ್ಟುಬಲಗೊಳ್ಳಲಿದೆ ಎಂದು ಹೇಳಿದ್ದಾರೆ.

ಆ್ಯಂಬುಲೆನ್ಸ್‌ ಹಸ್ತಾಂತರ:

ಬಾಂಗ್ಲಾ ದೇಶಕ್ಕೆ ಭಾರತ ಮಾನವೀಯ ನೆಲೆಯ ಮೇಲೆ 12 ಲಕ್ಷ ಕೋವಿಡ್‌ ಲಸಿಕೆ ಹಾಗೂ 109 ಆ್ಯಂಬುಲೆನ್ಸ್‌ಗಳನ್ನು ಪೂರೈಸಲು ಉದ್ದೇಶಿಸಿದೆ. ಇದರ ಧ್ಯೋತಕವಾಗಿ ನರೇಂದ್ರ ಮೋದಿ ಅವರು ಆ್ಯಂಬುಲೆನ್ಸ್‌ನ ಕೀ ಹಾಗೂ ಕೊರೋನಾ ಲಸಿಕೆಯನ್ನು ಒಳಗೊಂಡ ಬಾಕ್ಸ್‌ ಅನ್ನು ಪ್ರಧಾನಿ ಶೇಖ್‌ ಹಸೀನಾ ಅವರಿಗೆ ಹಸ್ತಾಂತರಿಸಿದರು.