ಭಾರತಕ್ಕೆ ಬರಲೊಲ್ಲೆ ಎಂದ ಇಮ್ರಾನ್: ಒಳ್ಳೆದಾಯ್ತು ಎಂದ ಹಿಂದೂಸ್ಥಾನ್!
ಭಾರತಕ್ಕೆ ಬರೋದಿಲ್ಲ ಪಾಕ್ ಪ್ರಧಾನಿ ಇಮ್ರಾನ್ ಖಾನ್| ವರ್ಷಾಂತ್ಯಕ್ಕೆ ಭಾರತದಲ್ಲಿ ಶಾಂಘೈ ಸಹಕಾರ ಒಕ್ಕೂಟ ಶೃಂಗಸಭೆ| ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭಾರತಕ್ಕೆ ಆಹ್ವಾನಿಸುವ ಸಾಧ್ಯತೆ| ಇಮ್ರಾನ್ ಖಾನ್ ಭಾರತಕ್ಕೆ ಬರುವ ಸಾಧ್ಯತೆ ಕ್ಷೀಣ ಎಂದ ಪಾಕ್| ಸಚಿವರು ಹಾಗೂ ಅಧಿಕಾರಿಗಳು ಭಾರತಕ್ಕೆ ಬರುವ ಸಾಧ್ಯತೆ|
ಇಸ್ಲಾಮಾಬಾದ್(ಜ.24): ಈ ವರ್ಷದ ಅಂತ್ಯಕ್ಕೆ ಭಾರತದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಒಕ್ಕೂಟದ ಶೃಂಗಸಭೆಯಲ್ಲಿ ಭಾಗವಹಿಸಲು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ಎರಡೂ ದೇಶಗಳ ಮಧ್ಯೆ ಸಂಬಂಧ ಹದಗೆಟ್ಟಿದ್ದು, ಇಂತಹ ಪರಿಸ್ಥಿತಿಯಲ್ಲಿ ಭಾರತಕ್ಕೆ ಪ್ರವಾಸ ಕೈಗೊಳ್ಳುವುದು ಸೂಕ್ತವಲ್ಲ ಎಂದು ಇಮ್ರಾನ್ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಪಾಕ್ ಸರ್ಕಾರಿ ಮೂಲಗಳು, ಇಮ್ರಾನ್ ಖಾನ್ ಶಾಂಘೈ ಸಹಕಾರ ಒಕ್ಕೂಟದ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ತೆರಳದಿರುವ ತೀರ್ಮಾನ ಕೈಗೊಳ್ಳಬಹುದು ಎಂದು ತಿಳಿಸಿವೆ.
ಇಮ್ರಾನ್ ಖಾನ್ ಅವರನ್ನು ಭಾರತಕ್ಕೆ ಆಹ್ವಾನಿಸಲಿರುವ ಮೋದಿ ಸರ್ಕಾರ!
ಆದರೆ ಶೃಂಗಸಭೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಸಚಿವರು ಹಾಗೂ ಅಧಿಕಾರಿಗಳು ಭಾರತಕ್ಕೆ ಬರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂದು ಪಾಕಿಸ್ತಾನ ಹೇಳಿದೆ.
ಸದ್ಯ ಶಾಂಘೈ ಸಹಕಾರ ಒಕ್ಕೂಟದ ಶೃಂಗಸಭೆಯಲ್ಲಿ ಭಾಗವಹಿಸಲು ಬರುವಂತೆ ಭಾರತ ಇದುವರೆಗೂ ಆಹ್ವಾನವನ್ನೇ ನೀಡಿಲ್ಲ. ಆದರೆ ಪಾಕಿಸ್ತಾನ ಮಾತ್ರ ಈ ಕುರಿತು ತರಾತುರಿಯಲ್ಲಿ ಹೇಳಿಕೆ ನೀಡುತ್ತಿದೆ.