Asianet Suvarna News Asianet Suvarna News

PSI Scam: ಎಚ್ಡಿಕೆ, ಇತರರಿಗೆ ಯಾಕೆ ನೋಟಿಸ್‌ ನೀಡಿದ್ದಾರೆಂದು ಗೊತ್ತಿಲ್ಲ: ಸಚಿವ ಪರಮೇಶ್ವರ್‌

ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತಿತರರಿಗೆ ಯಾವ ಕಾರಣಕ್ಕೆ ನೋಟಿಸ್‌ ನೀಡಿದ್ದಾರೆಂಬುದು ಗೊತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. 

I dont know why notice was given to HD Kumaraswamy and others Says Minister Dr G Parameshwar gvd
Author
First Published Dec 29, 2023, 2:00 AM IST

ಕಲಬುರಗಿ (ಡಿ.29): ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತಿತರರಿಗೆ ಯಾವ ಕಾರಣಕ್ಕೆ ನೋಟಿಸ್‌ ನೀಡಿದ್ದಾರೆಂಬುದು ಗೊತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಪಿಎಸ್‌ಐ ನೇಮಕಾತಿ ಹಗರಣದ ತನಿಖೆಯನ್ನು ನ್ಯಾಯಮೂರ್ತಿ ವೀರಪ್ಪಣ್ಣನವರ ಸಮಿತಿಗೆ ಒಪ್ಪಿಸಲಾಗಿದೆ. ಅದು ಏಕ ಸದಸ್ಯ ಸಮಿತಿ. ಆ ಸಮಿತಿ ತನಗೆ ಸಿಕ್ಕ ಮಾಹಿತಿ ಆಧಾರದಲ್ಲಿ ಯಾರನ್ನು ಬೇಕಿದ್ದರೂ ನೋಟಿಸ್‌ ಕೊಟ್ಟು ಕರೆದು ಮಾಹಿತಿ ಪಡೆಯಬಹುದು. 

ತನಿಖೆ ವಿಚಾರದಲ್ಲಿ ಸಮಿತಿಯವರಿಗೆ ಯಾವ ಮಾಹಿತಿ ಇದೆ ಎಂಬುದು ನನಗೆ ಗೊತ್ತಿಲ್ಲ ಎಂದರು. ತನಿಖೆ ಮುಗಿದ ಬಳಿಕ ಸರ್ಕಾರಕ್ಕೆ ಸಮಿತಿ ವರದಿ ಸಲ್ಲಿಸುತ್ತದೆ. ವರದಿ ನಮ್ಮ ಕೈಸೇರುವವರೆಗೆ ನಾವು ಯಾವುದೇ ತೀರ್ಮಾನ ಕೈಗೊಳ್ಳುವಂತಿಲ್ಲ. ಮುಂದೆ ಇಂಥ ಅಕ್ರಮ ತಡೆಯಲು ಹೊಸ ಕಾನೂನಿನ ಅಗತ್ಯವಿದ್ದರೆ ಆ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕಾಗುತ್ತದೆ ಎಂದರು. ಇಂಥ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮೋಸವಾಗುತ್ತದೆ. ಮೊದಲು ತನಿಖೆ ಆಗಲಿ, ನಂತರ ನಮ್ಮ ಸರ್ಕಾರ ಮುಂದಿನ ತಿರ್ಮಾನ ಮಾಡುತ್ತದೆ ಎಂದರು.

ರಾಜ್ಯದ ಅಭಿವೃದ್ಧಿಯಲ್ಲಿ ರಾಜಕಾರಣಿಗಳ ಭಾವನೆ ಒಂದೇ ಆಗಿರಬೇಕು: ಸಚಿವ ಕೆ.ಜೆ.ಜಾರ್ಜ್‌

ವರ್ಷಾಚರಣೆಗೆ ಪೊಲೀಸರ ಕಟ್ಟೆಚ್ಚರ: ಹೊಸ ವಾರ್ಷಾಚರಣೆ ಹಿನ್ನೆಲೆಯಲ್ಲಿ ನಗರ ಸೇರಿದಂತೆ ರಾಜ್ಯಾದ್ಯಂತ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ಈಗಾಗಲೇ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ ಕೆಲವು ನಿರ್ದೇಶನಗಳನ್ನು ನೀಡಲಾಗಿದೆ ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. 

ಈಗಾಗಲೇ ಪೊಲೀಸ್‌, ಗುಪ್ತದಳ, ಬಿಬಿಎಂಪಿ, ಆರೋಗ್ಯ, ಅಗ್ನಿಶಾಮಕದಳ, ಬಿಎಂಟಿಸಿ, ಅಬಕಾರಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು. ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ನಡೆಸುವ ಪ್ರದೇಶಗಳಲ್ಲಿ ವಿಶೇಷ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ನಗರಗಳಲ್ಲೂ ಮುಂಜಾಗ್ರತೆ ವಹಿಸಲು ನಿರ್ದೇಶನ ನೀಡಲಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನೂ ವಿವರಿಸಲಾಗಿದೆ ಎಂದು ಹೇಳಿದರು.

ಆದಿದ್ರಾವಿಡ ಸಮುದಾಯದ ಬೇಡಿಕೆ ಈಡೇರಿಸಲು ಬದ್ಧ: ಆದಿ ದ್ರಾವಿಡ ಸಮುದಾಯದವರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, ಅವುಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ನಗರದ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ಭಾನುವಾರ ರಾಜ್ಯ ಆದಿ ದ್ರಾವಿಡ ಸಮಾವೇಶರಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆದಿ ದ್ರಾವಿಡ ಸಮುದಾಯದ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಿ ಹಂತ ಹಂತವಾಗಿ ಈಡೇರಿಸಲಾಗುವುದು. ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ಮೀಸಲಿಡಲಾಗುವುದು. ಸಮುದಾಯದ ಮೂಲಕ್ಷೇತ್ರ ಅಭಿವೃದ್ಧಿ, ಸಮುದಾಯ ಭವನ ನಿರ್ಮಾಣ ಇತ್ಯಾದಿಗಳಿಗೆ ಅಗತ್ಯ ನೆರವು ನೀಡಲಾಗುವುದು. ಅಲ್ಲದೆ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಿಸುವ ಸಂದರ್ಭ ಒಂದು ನಿಗಮ ಮಂಡಳಿಗೆ ಆದಿ ದ್ರಾವಿಡ ಸಮುದಾಯದ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗುವುದು ಎಂದು ಪರಮೇಶ್ವರ್‌ ಹೇಳಿದರು.

3 ವರ್ಷದಲ್ಲಿ 3 ಸಾವಿರ ಕೆಪಿಎಸ್ ಶಾಲೆ ಸ್ಥಾಪನೆ ಗುರಿ: ಸಚಿವ ಮಧು ಬಂಗಾರಪ್ಪ

ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ಜಮೀನನ್ನು ಪರಿಶಿಷ್ಟ ಸಮುದಾಯಕ್ಕೆ ಮೀಸಲಿರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದ ಅವರು, ಆದಿ ದ್ರಾವಿಡ ಸಮುದಾಯದವರನ್ನು ವಿವಿಧ ಜಿಲ್ಲೆಗಳಲ್ಲಿ ವಿವಿಧ ರೀತಿ ಗುರುತಿಸುತ್ತಾರೆ. ಉಪಜಾತಿಗಳನ್ನಾಗಿ ಮಾಡುವ ಮೂಲಕ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಸಚಿವ ಮಹದೇವಪ್ಪ ಅವರೊಂದಿಗೆ ಮಾತನಾಡಿ ಜಾತಿ ಪ್ರಮಾಣ ಪತ್ರದ ಗೊಂದಲವನ್ನೂ ಬಗೆಹರಿಸಲಾಗುವುದು ಎಂದು ಹೇಳಿದರು.

Follow Us:
Download App:
  • android
  • ios