ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಗೆ ಒಲವು: ನಡ್ಡಾ ಭೇಟಿಯಾದ ದೊಡ್ಡಗೌಡ್ರು
ಬೆಂಗಳೂರು (ಜೂ.06): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಭಲ ಪ್ರಾದೇಶಿಕ ಪಕ್ಷವಾಗಿದ್ದ ಜೆಡಿಎಸ್ ಈಗ ಸಂಪೂರ್ಣ ನೆಲಕಚ್ಚಿ ಹೋಗಿದೆ. ಪ್ರತಿಬಾರಿ 25 ರಿಂದ 30ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುತ್ತಿದ್ದ ಜೆಡಿಎಸ್ 2023ರ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ ಮೇಲೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕಣ್ಣಿಟ್ಟಿದ್ದಾರೆ. ಹೀಗಾಗಿ, ಎನ್ಡಿಎ ಮೈತ್ರಿಕೂಟ ಸೇರಲು ಜೆಡಿಎಸ್ ಒಲವು ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಪಾರ್ಲಿಮೆಂಟ್ ಉದ್ಘಾಟನೆ ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಭೇಟಿ ಮಾಡಿದ್ದ ದೇವೇಗೌಡರು, ಹಲವು ವಿಚಾರಗಳನ್ನು ಚರ್ಚೆ ಮಾಡಿದ್ದಾರೆಂಬ ಸುಳಿವು ಸಿಕ್ಕಿದೆ. ಇನ್ನು ರಾಜ್ಯದ ಕೆಲವು ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳಿಗೆ ಬಿಜೆಪಿ ಬೆಂಬಲವನ್ನೂ ಕೇಳಿದ್ದಾರೆ.